ಹೊಸದಿಗಂತ ವರದಿ ಹಾಸನ:
ಮಾರುಕಟ್ಟೆಯಲ್ಲಿ ಕೊತ್ತಂಬರಿ ಸೊಪ್ಪಿಗೆ ನ್ಯಾಯಯುತ ಬೆಲೆ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು ತಾವು ಬೆಳೆದ ಬೆಳೆಯನ್ನು ಜಮೀನಿನಲ್ಲೇ ಟ್ರ್ಯಾಕ್ಟರ್ ಮೂಲಕ ನಾಶಪಡಿಸಿರುವ ಘಟನೆ ಹಾಸನ ತಾಲೂಕಿನ ದುದ್ದ ಹೋಬಳಿಯ ಹರಿಹರಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ಸತೀಶ್ ಅವರು ಒಂದು ಎಕರೆ ಜಮೀನಿನಲ್ಲಿ ಸಾಲ ಮಾಡಿ ಕೊತ್ತಂಬರಿ ಬೆಳೆ ಬೆಳೆದಿದ್ದರು. ಉತ್ತಮ ಇಳುವರಿ ಬಂದಿದ್ದರೂ ಮಾರುಕಟ್ಟೆಯಲ್ಲಿ ಕನಿಷ್ಠ ಬೆಲೆಯೂ ದೊರೆಯದ ಪರಿಣಾಮ ಬೆಳೆಯನ್ನು ಮಾರಾಟ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂಬ ಸ್ಥಿತಿಗೆ ತಲುಪಿದ್ದಾರೆ. ಹೀಗಾಗಿ ಅನಿವಾರ್ಯವಾಗಿ ಟ್ರ್ಯಾಕ್ಟರ್ ಮೂಲಕ ಬೆಳೆಯನ್ನು ನಾಶಪಡಿಸಿದ್ದಾರೆ.
ಬೆಳೆ ಬೆಳೆಯಲು ಮಾಡಿದ ಖರ್ಚು, ಕೂಲಿ ಹಾಗೂ ಇತರ ನಿರ್ವಹಣಾ ವೆಚ್ಚಗಳನ್ನು ಭರಿಸಲು ಸಾಧ್ಯವಾಗದೆ ರೈತರಿಗೆ ನಷ್ಟ ಉಂಟಾಗಿದೆ. ಶ್ರಮಪಟ್ಟು ಬೆಳೆದ ಬೆಳೆಗೆ ಸೂಕ್ತ ಧಾರಣೆ ದೊರೆಯದಿರುವುದು ಕೃಷಿಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಇದನ್ನೂ ಓದಿ:
ರೈತರ ಉತ್ಪನ್ನಗಳಿಗೆ ವೈಜ್ಞಾನಿಕ ಹಾಗೂ ನ್ಯಾಯಯುತ ಬೆಲೆ ದೊರೆಯುವಂತೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು. ಬೆಲೆ ಕುಸಿತದಿಂದ ರೈತರು ಬೆಳೆ ನಾಶಪಡಿಸುವಂತಹ ಪರಿಸ್ಥಿತಿ ನಿರ್ಮಾಣವಾಗದಂತೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.



