ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆಯ ಗರ್ಭದಲ್ಲಿದ್ದ ಮರಿ ಮೃತಪಟ್ಟಿದೆ.
ಮಾರ್ಚ್ 19 ರಂದು ತ್ಯಾವರೆಕೊಪ್ಪ ಸಫಾರಿಯಲ್ಲಿ ಕರ್ತವ್ಯದಲ್ಲಿದ್ದ ತರಬೇತಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರು ಗರ್ಭಿಣಿ ನೀರಾನೆ ಹಂಸಿನಿಯ ಆರೋಗ್ಯ ತಪಾಸಣೆ ನಡೆಸಲು ಮುಂದಾಗಿದ್ದರು. ಈ ವೇಳೆ ಹಂಸಿನಿ ಏಕಾಏಕಿ ದಾಳಿ ಮಾಡಿತ್ತು. ಈ ಭೀಕರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಮೀಕ್ಷಾ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
ಇದು ಅಲ್ಲಿನ ಸ್ಥಳೀಯರನ್ನು ಹಾಗೂ ಸಮೀಕ್ಷಾ ಅವರ ಮನೆಯವರ ಆಕ್ರೋಶಕ್ಕೆ ಕಾರಣವಾಗಿತ್ತು. ಸರಿಯಾದ ಸುರಕ್ಷತೆಯ ಕ್ರಮಗಳು ಇಲ್ಲದೆ ಕಳಿಸಿರುವುದು ಅರಣ್ಯಾ ಹಾಗೂ ಅಲ್ಲಿನ ಹಿರಿಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ. ಹಂಸಿನಿ ನೀರಾನೆಯು ಮರಿಯನ್ನು ಕಳೆದುಕೊಳ್ಳುತ್ತಿರುವುದು ಇದು ಮೂರನೇ ಬಾರಿ. ಈ ಹಿಂದೆಯೂ ಎರಡು ಬಾರಿ ಮರಿಗಳಿಗೆ ಜನ್ಮ ನೀಡಿದ್ದ ಹಂಸಿನಿ, ಹುಟ್ಟಿದ ಕೆಲವೇ ದಿನಗಳಲ್ಲಿ ಅವುಗಳನ್ನು ಕಳೆದುಕೊಂಡಿತ್ತು. ಈ ಬಾರಿಯಾದರೂ ಮರಿ ಉಳಿಯಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಫಾರಿ ಸಿಬ್ಬಂದಿಗೆ ಈಗ ನಿರಾಸೆಯಾಗಿದೆ.
ದೈಹಿಕ ಹಾಗೂ ಮಾನಸಿಕ ಒತ್ತಡದಿಂದ ಮರಿ ಒಳಗೇ ಸತ್ತುಹೋಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.



