ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿರುವ ಶಾರೀಖ್ ಆರೋಗ್ಯ ಸುಧಾರಣೆಯಾದ ಬಳಿಕವೇ ವಿಚಾರಣೆ ನಡೆಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಂಗಳೂರು ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಶಾರೀಖ್ ಆರೋಗ್ಯ ಸುಧಾರಣೆಯಾದ ಬಳಿಕ ವಿಚಾರಣೆ ನಡೆಸುತ್ತೇವೆ, ಶಂಕಿತ ಉಗ್ರ ಮತೀನ್ ಎಲ್ಲೇ ಇದ್ದರೂ ಪತ್ತೆ ಹಚ್ಚಲಿದ್ದೇವೆ ಎಂದರು.
ಚಲಿಸುತ್ತಿರುವ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ರಾಜ್ಯ ಸರ್ಕಾರ ಎನ್ಐಎ ತನಿಖೆಗೆ ಶಿಫಾರಸು ಮಾಡಿದೆ. ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ, ಪ್ರಾಥಮಿಕ ತನಿಖೆಯ ಸಮಯದಲ್ಲಿ ಸಂಗ್ರಹಿಸಿದ ಪುರಾವೆಗಳು ಮತ್ತು ಇತರ ಮಾಹಿತಿಗಳ ಆಧಾರದ ಮೇಲೆ ಎನ್ಐಎ ತನಿಖೆಗೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಗೃಹ ಸಚಿವರು ಇತ್ತೀಚೆಗೆ ತಿಳಿಸಿದ್ದರು.