ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತು ಅಲ್ಲಲ್ಲಿ ಹೊಂಡ-ಗುಂಡಿಗಳು ಸೃಷ್ಟಿಯಾಗಿದೆ. ಸುಮಾರು ಎರಡು ಅಡಿ ಹೊಂಡಕ್ಕೆ ಬಸ್ ಹಾರಿದ ಪರಿಣಾಮ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ೩೦೦ ಮೀಟರ್ ದೂರ ಡಿವೈಡರ್ ಮೇಲೆ ಚಲಿಸಿದ ಘಟನೆ ಉವುಪಿ ಜಿಲ್ಲೆಯ ಕೋಟ ತಾಲೂಕಿನ ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ಶನಿವಾರ ೧೧ ಗಂಟೆ ಸುಮಾರಿಗೆ ನಡೆದಿದೆ.
ಮುಂಬೈನಿಂದ ಮಂಗಳೂರಿನತ್ತ ಸಾಗುತ್ತಿದ್ದ ಆನಂದ್ ಹೆಸರಿನ ಖಾಸಗಿ ಬಸ್ ಇದಾಗಿದ್ದು ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ಹೆದ್ದಾರಿ ಹೊಂಡಕ್ಕೆ ಬಸ್ ಟಯರ್ ಇಳಿದಾಗ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಸುಮಾರು ೩೦೦ ಮೀಟರ್ ದೂರ ಡಿವೈಡರ್ ಏರಿ ಸಾಗಿದ್ದು ಚಾಲಕನ ಜಾಗರುಕತೆಯಿಂದಾಗಿ ಪಲ್ಟಿಯಾಗುವುದು ತಪ್ಪಿದಂತಾಗಿದೆ. ಹೀಗೆ ಅಪಾಯದಲ್ಲಿ ಸಾಗಿದ ಬಸ್ ಕನ್ನುಕೆರೆ ಮಸೀದಿ ಎದುರು ಡಿವೈಡರ್ ಏರಿ ನಿಂತಿದೆ. ಬಸ್ಸಿನಲ್ಲಿ ೪೦ಕ್ಕೂ ಅಧಿಕ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ.
ಪ್ರತಿವರ್ಷ ಮಳೆಗಾಲದಲ್ಲಿ ಈ ಭಾಗದ ಹೆದ್ದಾರಿಯ ಮೇಲೆ ಮಳೆ ನೀರು ನಿಂತು ಹೊಂಡ ನಿರ್ಮಾಣವಾಗುವುದರಿಂದ ಹಲವು ಅವಘಡಗಳು ಸಂಭವಿಸುತ್ತಲೇ ಇದೆ. ಆದರೂ ಕೂಡ ಸಂಬಂದಪಟ್ಟವರು ಮಾತ್ರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ವಾಹನ ಸವಾರರು ಹಾಗೂ ಸ್ಥಳೀಯರು ಆಕ್ರೋಷ ವ್ಯಕ್ತಪಡಿಸಿದ್ದಾರೆ.