ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಲೋಕಸಭಾ ಚುನಾವಣೆಯನ್ನು ಪರಿಸರ ಸ್ನೇಹಿಯಾಗಿಸಲು ಚುನಾವಣಾ ಆಯೋಗ ಟೊಂಕಕಟ್ಟಿದೆ.
ಕನಿಷ್ಠ ಪ್ರಮಾಣದಲ್ಲಿ ಕಾಗದ ಬಳಕೆ, ಪರಿಸರ ಸ್ನೇಹಿ ವಾಹನಗಳ ಬಳಕೆಗೆ ಒತ್ತು ನೀಡುವ ಜೊತೆಗೆ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಗೆ ಕಡಿವಾಣ, ಕಾರ್ಪೂಲಿಂಗ್ಗೆ ಉತ್ತೇಜನ ಸೇರಿ ಹಲವು ಕ್ರಮಗಳಿಗೆ ಆಯೋಗ ಮುಂದಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣೆಗೆ ಸಂಬಂಧಿಸಿದ ಪ್ರತಿ ಕಾರ್ಯಕ್ರಮಗಳೂ ಆದಷ್ಟು ಪರಿಸರ ಸ್ನೇಹಿಯಾಗಿರಬೇಕು ಎಂಬುದು ಆಯೋಗದ ಉದ್ದೇಶವಾಗಿದೆ. ಚುನಾವಣಾಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳಿಗೆ ಈ ಕುರಿತು ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ. ಪರಿಸರ ಸ್ನೇಹಿ ಚುನಾವಣೆ ನಡೆಸಲು ಹಲವು ಕ್ರಮಕ್ಕೆ ಮುಂದಾಗಿದ್ದೇವೆ. ತ್ಯಾಜ್ಯ ನಿರ್ವಹಣೆಗೆ ಒತ್ತು ನೀಡಬೇಕು. ಕಾಗದದ ಬಳಕೆಯನ್ನು ಆದಷ್ಟೂ ಕಡಿಮೆ ಮಾಡಬೇಕು ಎಂದು ಕೂಡಾ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಪರಿಸರ ಸ್ನೇಹಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳೂ ಸಾಥ್ ನೀಡಬೇಕು ಎಂದೂ ಅವರು ಕೋರಿದ್ದಾರೆ.