ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನಾರೋಗ್ಯದಿಂದ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚವನ್ನು ಸರ್ಕಾರದ ವತಿಯಿಂದ ಭರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಚನ್ನವೀರ ಕಣವಿ ಅವರು ರಾಜ್ಯ ಕಂಡ ಅತ್ಯಂತ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಚಿಕಿತ್ಸೆ ಸಂದರ್ಭದಲ್ಲಿ ಗೊತ್ತಾಗಿದೆ. ಅವರಿಗೆ ನಿರಂತರ ಚಿಕಿತ್ಸೆ ಹಾಗೂ ವೈದ್ಯಕೀಯ ಆಮ್ಲಜನಕ ನೀಡಲಾಗುತ್ತಿದೆ.ಅವರು ಚೇತರಿಸಿಕೊಂಡು ಆರೋಗ್ಯ ಪೂರ್ಣ ಜೀವನ ನಡೆಸಬೇಕು ಎಂಬುದು ನಮ್ಮ ಬಯಕೆ. ಹೀಗಾಗಿ ಕಣವಿ ಅವರ ಆಸ್ಪತ್ರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು ಎಂದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಚನ್ನವೀರ ಕಣವಿ ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ. ಅವರು ಗುಣಮುಖರಾಗಿ ಬರುವುದೇ ರಾಜ್ಯದ ಸೌಭಾಗ್ಯ ಎಂದು ಸಿಎಂ ಬೊಮ್ಮಾಯಿ ಬರೆದುಕೊಂಡಿದ್ದಾರೆ.