ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ಹಿಂದೂ ಸೇನಾ ಸಂಘಟನೆ ಅಧ್ಯಕ್ಷ ವಿಷ್ಣು ಗುಪ್ತಾ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಹಂಗಾಮಿ ಮುಖ್ಯ ನ್ಯಾಯಾಮೂರ್ತಿ ಮನಮೋಹನ್ ನೇತೃತ್ವದ ವಿಭಾಗೀಯ ಪೀಠವು, ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ, ಬೇಡವೇ ಎಂಬುದು ಅವರ ವೈಯಕ್ತಿಕ ನಿರ್ಧಾರ ಎಂದು ಹೇಳಿದೆ.
ಇದೇ ಸಂದರ್ಭ ವೈಯಕ್ತಿಕ ಹಿತಾಸಕ್ತಿ ಎನ್ನುವುದು ರಾಷ್ಟ್ರೀಯ ಹಿತಾಸಕ್ತಿಗೆ ಅಧೀನವಾಗಿರಬೇಕು ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ ಪೀಠ, ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್, ದೇಶದ ರಾಷ್ಟ್ರಪತಿಗಳು ಈ ಬಗ್ಗೆ ನಿರ್ಧರಿಸಬಹುದು. ಆದರೆ ಸರ್ಕಾರ ಕಾರ್ಯನಿರ್ವಹಿಸುತ್ತಿಲ್ಲ ಎಂದು ನಾವು ಹೇಗೆ ಘೋಷಿಸಲು ಸಾಧ್ಯ? ಅವರಿಗೆ ನಮ್ಮ ಮಾರ್ಗದರ್ಶನ ಅಗತ್ಯವಿಲ್ಲ. ಈ ಬಗ್ಗೆ ರಾಷ್ಟ್ರಪತಿಗಳು, ಎಲ್ಜಿ ಅವರನ್ನು ಸಂಪರ್ಕಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯವಿದೆ ಎಂದು ನ್ಯಾಯಪೀಠವು ಹೇಳಿದೆ. ಬಳಿಕ ನ್ಯಾಯಾಲಯದ ಸಲಹೆಯಂತೆ ಅರ್ಜಿದಾರರು ಅರ್ಜಿಯನ್ನು ಹಿಂಪಡೆದಿದ್ದಾರೆ.