ಹೊಸದಿಗಂತ ವರದಿ,ಕಲಬುರಗಿ:
ತಲೆ ಮೇಲೆ ಕಲ್ಲನ್ನು ಎತ್ತಿಹಾಕಿ ಯುವಕನನ್ನು ಭೀಕರವಾಗಿ ಹತ್ಯೆಮಾಡಿರುವ ಘಟನೆ ಕಮಲಾಪುರ ತಾಲೂಕಿನ ಮಹಾಗಾಂವ್ ಪುನರ ವಸತಿ ಕೇಂದ್ರದಲ್ಲಿ ನಡೆದಿದೆ. ಬಸವನಗರ ನಿವಾಸಿ ಮಂಜುನಾಥ ಕಟ್ಟಿಮನಿ (22) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.
ಮಂಜುನಾಥ ನಾಲ್ಕು ದಿನದ ಹಿಂದೆ ಕಾಣೆಯಾಗಿದ್ದನು. ಈ ಕುರಿತು ಕುಟುಂಬಸ್ಥರು ಆರ್.ಜಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಮಂಜುನಾಥ ಮಹಾಗಾಂವ್ನ ಪುನರ ವಸತಿ ಶಾಲೆಯ ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿರುವುದು ತಿಳಿದುಬಂದಿದೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮಂಜುನಾಥ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಸ್ನೇಹಿತರೇ ನನ್ನ ಮಗ ಮಂಜುನಾಥನನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಯುವಕನ ಪೋಷಕರು ಆರೋಪಿಸಿ ದೂರು ನೀಡಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆ ಕೊಲೆ ನಡೆದಿರಬಹುದೆಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಂತಕರು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಕುರಿತು ಮಹಾಗಾಂವ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.