ಹೊಸದಿಗಂತ ವರದಿ, ಮೈಸೂರು:
ಕಾಲೇಜ್ವೊಂದರ ಉಪನ್ಯಾಸಕರೊಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೊಸಹಳ್ಳಿ ಗೇಟ್ ನಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಇಂಗಲವಾಡಿ ಗ್ರಾಮದ ಮಹದೇವಪ್ಪ ಎಂಬುವರರ ಪುತ್ರ ಮಾದಪ್ಪ (೪೫) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕ.
ನಂಜನಗೂಡು ಪಟ್ಟಣದ ವಿ.ಎ ಲೇಔಟ್ ನಲ್ಲಿ ಸ್ವಂತ ಮನೆಯಲ್ಲಿ ವಾಸವಾಗಿದ್ದರು. ಕಳೆದ ಎರಡು ವರ್ಷಗಳ ಹಿಂದೆ ನೂತನ ಮನೆ ಗೃಹಪ್ರವೇಶವು ಕೂಡ ನಡೆದಿತ್ತು. ಚಾಮರಾಜನಗರ ಜಿಲ್ಲಾ ಕೇಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಕಷ್ಟು ವರ್ಷಗಳಿಂದಲೂ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಪತ್ನಿ ಪೂರ್ಣಿಮಾ ಜೆಎಸ್ಎಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಪತಿ ಪತ್ನಿ ಅನ್ನೋನ್ಯವಾಗಿ ಜೀವನ ಸಾಗಿಸುತ್ತಿದ್ದ ಇವರಿಬ್ಬರಿಗೆ ೧೬ ವರ್ಷದ ಪುತ್ರಿ ಇದ್ದಾಳೆ.
ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ರಘು, ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.