ಹೊಸದಿಗಂತ ಡಿಜಿಟಲ್ ಡೆಸ್ಕ್
ದೆಹಲಿಯಲ್ಲಿ ನೀಟ್ (NEET) ಪರೀಕ್ಷಾ ಅಕ್ರಮ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಮತ್ತು ಇಂಟರ್ನೆಟ್ ಸ್ಥಗಿತವನ್ನು ವಿರೋಧಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ಪ್ರಹಾರ ನಡೆಸಿದ್ದಾರೆ.
ಭಾರತ ಮಂಗಳ ಗ್ರಹಕ್ಕೆ ಹೋದಾಗ ಅಥವಾ ಕ್ರೀಡೆಯಲ್ಲಿ ಒಲಿಂಪಿಕ್ಸ್ ಗೆದ್ದಾಗ ಪ್ರಧಾನಿ ಮೋದಿ ಅದರ ಸಂಪೂರ್ಣ ಕ್ರೆಡಿಟ್ ತಾವೇ ತಗೆದುಕೊಳ್ಳುತ್ತಾರೆ. ಹಾಗಿದ್ದಮೇಲೆ ಅವರ ಮೂಗಿನ ಕೆಳಗೆ ನಡೆದಿರುವ 152 ಪರೀಕ್ಷಾ ಪೇಪರ್ ಲೀಕ್ ವೈಫಲ್ಯಗಳ ಜವಾಬ್ದಾರಿಯನ್ನೂ ಅವರೇ ಹೊರಬೇಕು ಎಂದು ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ:
ಕೇಂದ್ರ ಸರ್ಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮತ್ತು ಕಣ್ಣೀರು ಅನಿಲ ಪ್ರಯೋಗ ಮಾಡಿಸಿದೆ. ಅಲ್ಲದೆ, ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಿ ವಿದ್ಯಾರ್ಥಿಗಳನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.
“ವಿದ್ಯಾರ್ಥಿಗಳು ಉಗ್ರರಲ್ಲ”:
ವಿದ್ಯಾರ್ಥಿಗಳು ತಮ್ಮ ಹಕ್ಕಿಗಾಗಿ ಹೋರಾಡುತ್ತಿದ್ದಾರೆ, ಅವರೇನು ಭಯೋತ್ಪಾದಕರಲ್ಲ. ಇಂಟರ್ನೆಟ್ ಕಟ್ ಮಾಡಿರುವುದರಿಂದ ಅವರ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಒಂದು ಕಡೆ ಮಕ್ಕಳ ಬಗ್ಗೆ ಕಾಳಜಿ ಇದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ, ಮತ್ತೊಂದು ಕಡೆ ಅವರ ಮೇಲೆಯೇ ಹಲ್ಲೆ ಮಾಡಿಸುವುದು ಪ್ರಧಾನಿಯವರ ಇಬ್ಬಂದಿ ನೀತಿಯನ್ನು ತೋರಿಸುತ್ತದೆ ಎಂದು ಅವರು ಕಿಡಿಕಾರಿದ್ದಾರೆ.
ಇದನ್ನೂ ಓದಿ:
ಶಿಕ್ಷಣ ಸಚಿವರ ವಜಾಕ್ಕೆ ಪಟ್ಟು:
ಪ್ರಧಾನಿ ಘೋಷಿಸಿರುವ ಫಾಸ್ಟ್ ಟ್ರ್ಯಾಕ್ ಕೋರ್ಟ್ ನಿರ್ಧಾರವು ಕಣ್ಣೊರೆಸುವ ತಂತ್ರವಾಗಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಸಂಸತ್ತಿನ ಒಳಗೂ ಮತ್ತು ಹೊರಗೂ ಕಾಂಗ್ರೆಸ್ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.



