ಹೊಸದಿಗಂತ ಡಿಜಿಟಲ್ ಡೆಸ್ಕ್:
ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಅಪಾರ ಹಾನಿಗಳಾಗಿವೆ .
ಇಂದು ಕರ್ನಾಟಕದ 12 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೇ ರೀತಿಯ ಮಳೆ ನಾಳೆ ಕೂಡ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಈಗಾಗಲೇ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನಲ್ಲೂ ಇನ್ನೆರಡು ದಿನ ಮಳೆ ಹೆಚ್ಚಾಗಲಿದೆ.
ಇವತ್ತು, ನಾಳೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆಯಿದೆ. ಹೀಗಾಗಿ, ಹಳದಿ ಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 5 ಮತ್ತು 6ರಂದು ರಾಜ್ಯದ ಹಲವೆಡೆ ಅಲ್ಲಲ್ಲಿ ಮಳೆ ಆಗಲಿದೆ. ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 24 ಹಾಗೂ ಕನಿಷ್ಠ ಉಷ್ಣಾಂಶ 19 ಇರಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಹೇಳಿಕೆ ನೀಡಿದ್ದಾರೆ.
ಈಗಾಗಲೇ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 4ರಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 5 ಮತ್ತು 6ರಂದು ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಡಿಸೆಂಬರ್ 4ರಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಕಂಟ್ರೋಲ್ ರೂಂ ತೆರೆದಿದೆ. ಸಹಾಯಕ್ಕಾಗಿ ಕಂಟ್ರೋಲ್ ರೂಂ ನಂಬರ್ 08262 238950ಗೆ ಕರೆ ಮಾಡುವಂತೆ ಸೂಚನೆ ನೀಡಲಾಗಿದೆ