ಹೊಸ ದಿಗಂತ ವರದಿ, ಕಲಬುರಗಿ:
ಜಾಗತಿಕವಾಗಿ ದೇಶಗಳೊಂದಿಗೆ ಸ್ಪರ್ಧೆಗೆ ಶಿಕ್ಷಣ ತುಂಬಾ ಅವಶ್ಯಕ. ಹೀಗಾಗಿ ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ದೊಡ್ಡದಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥನಾರಾಯಣ ಸಿ.ಎನ್. ಹೇಳಿದರು.
ಅವರು ಶನಿವಾರ ಕಲಬುರಗಿಯಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಾಲಕರ ವಸತಿ ನಿಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ಮತ್ತು ಕೆ.ಕೆ.ಆರ್.ಡಿ.ಬಿ. ಮಂಡಳಿಯ 4.32 ಕೋಟಿ ರೂ. ನೆರವಿನೊಂದಿಗೆ ಒಟ್ಟು 9.32 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಕಲಬುರಗಿ ಸರ್ಕಾರಿ ಮಹಾವಿದ್ಯಾಲಯದ 32 ಕೊಠಡಿಗಳು, ಗ್ರಂಥಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೇಮಕಾತಿ, ಮುಂಬಡ್ತಿ,ವೇತನ ಸೇರಿದಂತೆ ಶಿಕ್ಷಕರ ಸಮಸ್ಯೆಗಳನ್ನು ಹಂತ-ಹಂತವಾಗಿ ಸರ್ಕಾರವು ಬಗೆಹರಿಸುತ್ತಿದೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಎಂ.ಎಲ್.ಸಿ. ಶಶೀಲ ನಮೋಶಿ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ ಪಿ., ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಎಸ್.ಬಿ.ಪಾಟೀಲ, ಸರ್ಕಾರಿ ಮಹಾವಿದ್ಯಾಲಯದ ಪ್ರಾಂಶುಪಾಲ ಶಂಕ್ರೆಪ್ಪ ಇದ್ದರು.