ಹೊಸದಿಗಂತ ವರದಿ, ಶಿವಮೊಗ್ಗ:
ಯಾರು ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲವೋ ಅವರ ಬೋರ್ಡ್ ಅಧ್ಯಕ್ಷ ಸ್ಥಾನ ಸೇರಿದಂತೆ ಹುದ್ದೆಗಳನ್ನು ಕಳೆದುಕೊಳ್ಳಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಗ್ಯಾರೆಂಟಿ ಉತ್ಸವದ ಸಭೆಯಲ್ಲಿ ಮಾತನಾಡಿ, ಶಾಸಕರು, ಸಚಿವ ಮಧು ಬಂಗಾರಪ್ಪ ಮತ್ತು ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಪಕ್ಷದ ಎಲ್ಲಾ ಮುಖಂಡರು ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ಶ್ರಮಿಸಬೇಕು. ಇಲ್ಲವಾದರೆ ಮುಂದಿನ ಪರಿಣಾಮಗಳು ಬೇರೆ ಆಗಿರಲಿದೆ ಎಂದು ಎಚ್ಚರಿಸಿದರು.
ನಮ್ಮ ಬೂತ್ ನಮ್ಮ ಜವಾಬ್ದಾರಿ ಎಂಬ ಪರಿಕಲ್ಪನೆ ಮತ್ತು ಅಭಿಯಾನದ ಕುರಿತು ಮಾತನಾಡಿದ ಸುರ್ಜೇವಾಲ, ಸಚಿವ ಮಧು ಬಂಗಾರಪ್ಪ ಅವರ ಮೇಲೂ ಕಣ್ಣಿಡಲಾಗಿದೆ. ಈ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಗೆಲ್ಲಿಸಬೇಕು. ದೆಹಲಿ ವಾರ್ ರೂಂ ಮೂಲಕ ಶಾಸಕರು, ಮುಖಂಡರು ಕೆಲಸ ಮಾಡುತ್ತಿರುವ ಕುರಿತು ಮಾಹಿತಿ ಪಡೆಯಲಾಗುತ್ತಿದೆ. ಯಾರು ಚುನಾವಣೆಯಲ್ಲಿ ಸರಿಯಾಗಿ ಕೆಲಸ ಮಾಡುವುದಿಲ್ಲವೋ ಅವರಿಗೆ ಮುಂದಿನ ಎಂಎಲ್ಎ ಟಿಕೆಟ್ ಸಿಗುವುದಿಲ್ಲ ಎಂದು ತಿಳಿಸಿದರು.