ಹೊಸ ದಿಗಂತ ವರದಿ, ಮೈಸೂರು:
ಈ ಬಾರಿ ಸರಳ ದಸರಾ ಆಚರಣೆ ಮಾಡಲು ಉನ್ನತಾಧಿಕಾರ ಸಮಿತಿ ಮತ್ತು ಕಾರ್ಯಕಾರಿ ಸಮಿತಿಯಲ್ಲಿ ತೀರ್ಮಾನಿಸಿದಂತೆ ಆಯೋಜಿಸಲು ಅಧಿಕಾರಿಗಳು ಮಾಡಿಕೊಂಡಿರುವ ಪೂರ್ವಸಿದ್ಧತೆಯನ್ನು ಜಿಲ್ಲಾಧಿಕಾರಿಗಳೂ ಆಗಿರುವ ದಸರಾ ವಿಶೇಷಾಧಿಕಾರಿ ಡಾ. ಬಗಾದಿ ಗೌತಮ್ ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪರಿಶೀಲಿಸಿದರು.
ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಈಗಾಗಲೇ 6 ಉಪ ಸಮಿತಿಗಳನ್ನು ರಚಿಸಲಾಗಿದೆ. ಈ ಆರು ಸಮಿತಿಗಳು ಕಳೆದ ವರ್ಷ ಮಾಡಿದ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು, ಈ ವರ್ಷ ಮಾಡಬೇಕಾದ ಕೆಲಸಗಳ ಬಗ್ಗೆ ಸಲಹೆ ಸೂಚನೆ ನೀಡಿದರು.
ಸ್ವಾಗತ ಮತ್ತು ಆಮಂತ್ರಣ ಉಪ ಸಮಿತಿ, ದೀಪಾಲಂಕಾರ ಉಪ ಸಮಿತಿ, ಮೆರವಣಿಗೆ ಉಪಸಮಿತಿ, ಸಾಂಸ್ಕೃತಿಕ ದಸರಾ ಉಪ ಸಮಿತಿ, ಸ್ತಬ್ಧಚಿತ್ರ ಉಪ ಸಮಿತಿ, ಸ್ವಚ್ಛತೆ ಮತ್ತು ವ್ಯವಸ್ಥೆ ಉಪಸಮಿತಿಗಳ ಜವಾಬ್ದಾರಿಗಳನ್ನು ವಿವರಿಸಿದರು.
ದಸರಾ ಉನ್ನತಾಧಿಕಾರ ಸಮಿತಿಯ ಸೂಚನೆಗಳು ಮತ್ತು ಕಾರ್ಯಕಾರಿ ಸಮಿತಿಯ ನಿರ್ಣಯಗಳಂತೆ ಕೆಲಸ ಮಾಡಲು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಸಿ.ಇ.ಒ. ಎ.ಎಂ.ಯೋಗೀಶ್, ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್.ಮಂಜುನಾಥಸ್ವಾಮಿ, ಡಿಸಿಪಿ ಪ್ರದೀಪ್ ಗುಂಟಿ, ಮುಡಾ ಆಯುಕ್ತ ಡಾ ಡಿ.ಬಿ.ನಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.