ದಿಗಂತ ವರದಿ ಮಂಗಳೂರು:
ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಜರುಗಿದೆ.
ಕೂಡಲೇ ಅವರನ್ನು ನಗರದ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.
ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು. 2019ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನಲೆಯಲ್ಲಿ ಕಳೆದ ಫೆಬ್ರವರಿಯಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು.
ವೈಯಕ್ತಿಕ ಕಾರಣಗಳಿಂದ ಇಂದು ಆತ್ಮಹತ್ಯೆಗೆ ಯತ್ನಿಸಿದ, ಇವರನ್ನು ಕೂಡಲೇ ವೆನ್ ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ನಿಗಾವಣಿಗಾಗಿ ಇವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಪಂಚಾಯತ ನ ಲೆಕ್ಕಾಧೀಕ್ಷ ಬಾಲು ಡಿ.ಎಂ. ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಅವರ ಚಿಕಿತ್ಸೆಗೆ ನೆರವಾಗಿದ್ದಾರೆ.