ಹೊಸದಿಗಂತ ವರದಿ ಹುಬ್ಬಳ್ಳಿ:
ಬೆಳಗಾವಿ ಸುವರ್ಣ ಸೌಧದಲ್ಲಿ ಡಿ.4ರಿಂದ 15ರ ವರೆಗೆ ನಡೆಯುವ ಚಳಿಗಾಲದ ಅವೇಶನ ಪ್ರತಿಭಟನೆ, ಸತ್ಯಾಗ್ರಹ ನೆಪದಲ್ಲಿ ಸಮಯ ವ್ಯರ್ಥ ಮಾಡದೆ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಸಲಹೆ ನೀಡಿದ್ದಾರೆ.
10 ದಿನಗಳ ಕಾಲ ನಡೆಯುವ ಚಳಿಗಾಲದ ಅವೇಶನದ ಅತ್ಯಮೂಲ್ಯವಾದ ಸಮಯು ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವ್ಯರ್ಥವಾಗುತ್ತಿದೆ ಎಂದು ಹಲವರ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಅವೇಶನ ವ್ಯವಸ್ಥಿತವಾಗಿ ನಡೆಸಬೇಕು ಎಂದು ತಿಳಿಸಿದ್ದಾರೆ.
ಕೃಷಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವಾರು ಸಂಘಟನೆಗಳು ಧರಣಿ, ಸತ್ಯಾಗ್ರಹ ನಡೆಸುವುದು ಸಾಮಾನ್ಯ. ಈ ಹಿನ್ನಲೆಯಲ್ಲಿ ಅಧಿವೇಶನ ಆರಂಭಗೊಳ್ಳುವ ಮುಂಚೆಯೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖರ ಸಭೆ ಕರೆದು ಅವರ ಬೇಡಿಕೆ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿ ಅವುಗಳ ಪರಿಹಾರಕ್ಕೆ ಪ್ರಯತ್ನಿಸಬೇಕು ಎಂದರು.
ಅಧಿವೇಶನದ ಸಂದರ್ಭದಲ್ಲಿ ಸುವರ್ಣ ಸೌಧದ ಹೊರಗಡೆ ಧರಣಿ ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಸಚಿವ ಸಂಪುಟದ ಸಂಬಂಧಪಟ್ಟ ಸಚಿವರಿಗೆ ಸೂಚಿಸಬೇಕು ಹಾಗೂ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕೋರಿದ್ದಾರೆ.