ಹೊಸದಿಗಂತ ಡಿಜಿಟಲ್ ಡೆಸ್ಕ್:
ಪದಾಧಿಕಾರಿಗಳಾದವರು ಬದ್ಧತೆಯಿಂದ ಕೆಲಸ ಮಾಡಬೇಕು. ಪಕ್ಷದ ಕೆಲಸ ನಿರ್ಲಕ್ಷ್ಯ ಮಾಡುವುದನ್ನು ಸಹಿಸುವುದಿಲ್ಲ. ಇದು ಚುನಾವಣೆ ವರ್ಷ, ಎಲ್ಲರೂ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಪಕ್ಷದ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.
ಜೆಡಿಎಸ್ ರಾಜ್ಯ ಕಾರ್ಯಕಾರಿ ಸಮಿತಿ, ಪದಾಧಿಕಾರಿಗಳ ಸಭೆ ನಡೆದಿದೆ. ಈ ವೇಳೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪಕ್ಷದ ಕೆಲಸ ಮಾಡದೇ ನಿರ್ಲಕ್ಷ್ಯ ಮಾಡುವ ಪಕ್ಷದಲ್ಲಿ ಜಾಗವಿಲ್ಲ ಎಂದು ಹೇಳಿದ್ದಾರೆ.
ಹಳೆ ಮೈಸೂರು ಭಾಗ ಮಾತ್ರವಲ್ಲದೆ, ಉತ್ತರ ಕರ್ನಾಟಕ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಬಲವಾಗಿದೆ. ಜನರಲ್ಲಿ ನಮ್ಮ ಪಕ್ಷದ ಬಗ್ಗೆ ಬಹಳ ನಂಬಿಕೆ ಇದೆ. ನಮ್ಮ ಪಕ್ಷದಿಂದ ಒಳ್ಳೆಯದಾಗುತ್ತದೆ ಎನ್ನುವ ವಿಶ್ವಾಸ ಜನರಿಗೆ ಇದೆ. ಇದನ್ನು ಮುಖಂಡರು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ಪದಾಧಿಕಾರಿಗಳು ಎಲ್ಲರೂ ತಮ್ಮ ಜಿಲ್ಲೆ, ತಾಲೂಕು ಸೇರಿದಂತೆ ಅಗತ್ಯ ಇರುವ ಕಡೆಯೆಲ್ಲಾ ಪ್ರವಾಸ ಮಾಡಬೇಕು. ಮುಂದಿನ ಆರು ತಿಂಗಳು ಸವಾಲಾಗಿ ಸ್ವೀಕಾರ ಮಾಡಿ ಶ್ರಮಿಸಿ ದುಡಿಮೆ ಮಾಡಬೇಕು. ಕಾಂಗ್ರೆಸ್ ಮತ್ತು ಬಿಜೆಪಿ ಹಣದಿಂದ ಪಕ್ಷ ಬಲಗೊಳಿಸುತ್ತಿದ್ದಾರೆ. ಆದರೆ ನಮ್ಮ ಪಕ್ಷ ಜನ ಬಲದಿಂದ ಚುನಾವಣೆ ಎದುರಿಸಬೇಕಿದೆ ಎಂದು ಪಕ್ಷದ ಮುಖಂಡರಿಗೆ ಹೇಳಿದ್ದಾರೆ.