ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ಉಳಿವಿಗಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಲೇ ಇದ್ದು, ಕನ್ನಡಪರ ಸಂಘಟನೆಗಳು ಸೆ.29ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತನಾಡಿದ್ದು, ಕರ್ನಾಟಕ ಬಂದ್ ಹಿಂಪಡೆಯಿರಿ ಎಂದು ಯಾರೂ ಮನವಿ ಮಾಡಬೇಡಿ, ಯಾಕಂದ್ರೆ ಇದು ಅಸಾಧ್ಯ ಎಂದು ಹೇಳಿದ್ದಾರೆ.
ನಿನ್ನೆಯಷ್ಟೇ ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆ ನಡೆಸಿ ಮತ್ತೆ ತಮಿಳುನಾಡಿಗೆ 18 ದಿನ 3000 ಕ್ಯುಸೆಕ್ ನೀರು ಹರಿಸುವಂತೆ ಆದೇಶಿಸಿದೆ. ಇದರಿಂದಾಗಿ ರೈತರು ಇನ್ನಷ್ಟು ಆಕ್ರೋಶಗೊಂಡಿದ್ದಾರೆ.
ಗಾಯದ ಮೇಲೆ ಬರೆ ಹಾಕಿದಂತಾಗಿದ್ದು, ಸುಮ್ಮನೆ ಕೂರಲು ಆಗುವುದಿಲ್ಲ. ನಮಗೆ ನೀರು ಬೇಕು ಎಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆಗೆ ಬಿಜೆಪಿ ಹಾಗೂ ಜೆಡಿಎಸ್ ಸಾಥ್ ನೀಡಿದ್ದು, ವಿಧಾನಸೌಧದ ಮುಂಭಾಗ ಜಂಟಿ ಪ್ರತಿಭಟನೆ ನಡೆಸುತ್ತಿದ್ದಾರೆ.
ನಿನ್ನೆ ನಡೆದ ಹೋರಾಟದ ವೇಳೆ ಸಾಕಷ್ಟು ಜನರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಿಎಂ ಮನೆಗೆ ಮುತ್ತಿಗೆ ಹಾಕುವ ತಯಾರಿ ನಡೆದಿದೆ.