ಹೊಸದಿಗಂತ ಡಿಜಿಟಲ್ ಡೆಸ್ಕ್:
ʼಬಿಜೆಪಿಯವರು ರಾಷ್ಟ್ರವನ್ನು ಒಡೆಯುತ್ತಿದ್ದಾರೆ ನಾವದನ್ನು ಜೋಡಿಸುತ್ತಿದ್ದೇವೆʼ ಎಂದು ನೂತನವಾಗಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೇರಿದ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯ ನೆಹರೂ ಸ್ಮಾರಕದಲ್ಲಿ ಜವಾಹರಲಾಲ್ ನೆಹರೂ ಅವರ 133ನೇ ಜನ್ಮದಿನದ ಅಂಗವಾಗಿ ನಡೆದ ಉಪನ್ಯಾಸದಲ್ಲಿ ಮಾತನಾಡಿದ ಖರ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಮುಸುಕು ವಾಗ್ದಾಳಿ ನಡೆಸಿ “ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂಬ ಮಾತನ್ನೇ ಪದೇ ಪದೇ ಬಿಜೆಪಿಯವರು ಪುನರಾವರ್ತಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಭಾರತದ ಅಭಿವೃದ್ಧಿಯನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದ ಅವರು “ದೇಶದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ, ಮತ್ತು ನೀವು ಕೇವಲ 75,000 ಜನರಿಗೆ ನೇಮಕಾತಿ ಆದೇಶಗಳನ್ನು ನೀಡುತ್ತಿದ್ದೀರಿ. ಉಳಿದ ಉದ್ಯೋಗಗಳು ಎಲ್ಲಿವೆ? ” ಎಂದು ರೋಜ್ ಗಾರ್ ಮೇಳದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಭಾರತ್ ಜೋಡೋ ಯಾತ್ರೆಯನ್ನು ಉಲ್ಲೇಖಿಸಿ ಮಾತನಾಡಿದ ಖರ್ಗೆ “ಬಿಜೆಪಿಯವರು ದೇಶವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷವು ಅದನ್ನು ಪುನಃ ಜೋಡಿಸುವ ಕೆಲಸ ಮಾಡುತ್ತಿದೆ. ದೇಶದ ಎಲ್ಲರನ್ನೂ ಒಗ್ಗೂಡಿಸುವ ಉದ್ದೇಶದಿಂದ ಭಾರತ್ ಜೋಡೋ ಯಾತ್ರೆ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.