ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈದರಾಬಾದ್ನ ನಾಗೋಲ್ನಲ್ಲಿ ಗ್ರಾಹಕರ ಸೋಗಿನಲ್ಲಿ ಚಿನ್ನದ ಅಂಗಡಿಗೆ ನುಗ್ಗಿದ ಕಳ್ಳರು ಗುಂಡಿನ ದಾಳಿ ನಡೆಸಿರುವುದು ಸ್ಥಳೀಯವಾಗಿ ಸಂಚಲನ ಮೂಡಿಸಿದೆ. ಸ್ನೇಹಪುರಿ ಕಾಲೋನಿಯಲ್ಲಿರುವ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಇಬ್ಬರು ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಲ್ಲದೆ, ಅಂಗಡಿ ಮಾಲೀಕರಿಗೆ ಬೆದರಿಸಿ ಚಿನ್ನಾಭರಣ ದೋಚಿದ್ದಾರೆ. ಗುಂಡಿನ ದಾಳಿಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ.
ಹಲವು ದಿನಗಳಿಂದ ಶಾಂತವಾಗಿದ್ದ ಹೈದರಾಬಾದ್ ನಗರ ಈ ಗುಂಡಿನ ದಾಳಿಗೆ ಏಕಾಏಕಿ ತತ್ತರಿಸಿದೆ. ಚಿನ್ನದ ಅಂಗಡಿಗೆ ನುಗ್ಗಿದ ಕಳ್ಳರು ಗುಂಡಿನ ದಾಳಿ ನಡೆಸಿ ಚಿನ್ನಾಭರಣ ದೋಚಿದ್ದಾರೆ. ಚಿನ್ನದ ಅಂಗಡಿಯಲ್ಲಿದ್ದ ಜನರನ್ನು ಬೆದರಿಸಲು ಕಳ್ಳರು ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸುಳಿವಿಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದರು.
ಕಳ್ಳತನ ನಡೆದಿರುವ ರೀತಿ ನೋಡಿದರೆ ದುಷ್ಕರ್ಮಿಗಳು ಪ್ಲಾನ್ ಪ್ರಕಾರ ದರೋಡೆಗೆ ಸ್ನೇಹಪುರಿ ಕಾಲೋನಿಯಲ್ಲಿರುವ ಚಿನ್ನದ ಅಂಗಡಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.