ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದಾರೆ. ಇದು ಜನರ ನಿರೀಕ್ಷೆಗಳಿಗೆ ತಕ್ಕಂತೆ, ರಾಜ್ಯದ ಪ್ರಗತಿ, ಸ್ವಾವಲಂಬನೆಗೆ ಒತ್ತು ನೀಡುವಂತಹದ್ದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಅಭಿನಂದನೆ ತಿಳಿಸಿದ ಅವರು, ಇಂದು ತಮ್ಮ ಮೊದಲ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಅವರು ಮಂಡಿಸಿದ ಕರ್ನಾಟಕ ಬಜೆಟ್ ಜನರ ನಿರೀಕ್ಷೆಗಳಿಗೆ ತಕ್ಕಂತೆ, ರಾಜ್ಯದ ಪ್ರಗತಿ, ಸ್ವಾವಲಂಬನೆಗೆ ಒತ್ತು ನೀಡುವ ಜೊತೆಗೆ ನವಕರ್ನಾಟಕ ನಿರ್ಮಾಣದ ಪರಿಕಲ್ಪನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹೊಸಚೈತನ್ಯ ಮತ್ತು ಶಕ್ತಿ ನೀಡುತ್ತಿದೆ.
ಸಾಂಕ್ರಾಮಿಕದ ಸವಾಲುಗಳ ನಿರ್ವಹಣೆಯ ನಡುವೆ ಈ ಬಜೆಟ್ ಅತ್ಯಂತ ಆಶಾದಾಯಕವಾಗಿದೆ. ರೈತರು, ನೀರಾವರಿ, ಮೂಲಸೌಕರ್ಯ, ಆರ್ಥಿಕ ಅಭಿವೃದ್ಧಿ, ಉದ್ಯೋಗ ಸೃಷ್ಠಿ, ಅಧಿಕ ಹೂಡಿಕೆಗೆ ಆದ್ಯತೆಯ ಜೊತೆಗೆ ಯುವಶಕ್ತಿ, ಮಹಿಳೆಯರು ಮತ್ತು ದುರ್ಬಲ ವರ್ಗಗಳ ಜನರ ಸಬಲೀಕರಣಕ್ಕೆ ಉತ್ತೇಜನ ನೀಡಲಾಗಿದೆ. ಕೃಷಿ, ಪೂರಕ ವಲಯಗಳಿಗೆ 33,700 ಕೋಟಿ ರೂ ಮೀಸಲಿಡಲಾಗಿದೆ.
ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ 43,188 ಕೋಟಿ ರೂ, ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ ನಿಗದಿಪಡಿಸಿರುವುದು ಸ್ವಾಗತಾರ್ಹ. ಸರ್ವರಿಗೂ ಸಮಪಾಲು, ಸಮಬಾಳು, ಸಾಮಾಜಿಕ ನ್ಯಾಯ, ಅಂತ್ಯೋದಯದ ನಮ್ಮ ಬದ್ಧತೆಗೆ ಅನುಗುಣವಾಗಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸುವ ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದಿದ್ದಾರೆ.