ಹೊಸದಿಗಂತ ಡಿಜಿಟಲ್ ಡೆಸ್ಕ್ :
ವಿಧಾನಸಭೆಯಲ್ಲಿ ಇದು ನನ್ನ ಕೊನೆಯ ಭಾಷಣ. ಇನ್ನೆಂದೂ ವಿಧಾನಸಭೆ ಪ್ರವೇಶಿಸುವುದಿಲ್ಲ ಈ ಮಾತನ್ನು ಹೇಳಿದ್ದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ.
ಇಂದು ಅಧಿವೇಶನದಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಮತ್ತೆ ನಾನು ಸದನದ ಒಳಗೆ ಬರುವ ಪ್ರಶ್ನೆಯೇ ಇಲ್ಲ ಎಂದು ಭಾವುಕರಾಗಿ ಹೇಳಿದರು.
ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿದು ಕೊನೆಯ ಭಾಷಣ ಎಂದು ಹೇಳುತ್ತಿದ್ದಂತೆಯೇ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸೇರಿದಂತೆ ಪ್ರತಿಪಕ್ಷಗಳ ನಾಯಕರು ಅವರ ಮನವೊಲಿಸುವಂತೆ ಮಾತನಾಡಿದರು. ನೀವು ಹಿರಿಯ ನಾಯಕರು, ಮತ್ತೆ ಸದನ ಪ್ರವೇಶಿಸಬೇಕು ಎಂದರು.
ಇದೇ ವೇಳೆ ಯಡಿಯೂರಪ್ಪ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಕಾಂಗ್ರೆಸ್ ಮತ್ತೆ ವಿಪಕ್ಷ ಸ್ಥಾನದಲ್ಲೇ ಇರಬೇಕಾಗುತ್ತದೆ. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ 7ನೇ ವೇತನ ಆಯೋಗ ಜಾರಿ ಬಗ್ಗೆ ಘೋಷಣೆ ಮಾಡಬೇಕು. ಸರ್ಕಾರಿ ನೌಕರರು ರಸ್ತೆಗಿಳಿಯದಂತೆ ನೋಡಿಕೊಳ್ಳಬೇಕು ಎಂದು ಯಡಿಯೂರಪ್ಪ ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು ವಿಶ್ವ ಗುರು ಆಗಿದ್ದಾರೆ. ಅವರ ನಾಯಕತ್ವದಲ್ಲಿ ದೇಶ ಸದೃಢವಾಗಿದೆ. ಕೋವಿಡ್ ಸಾಂಕ್ರಾಮಿಕವನ್ನು ದೇಶ ಸಮರ್ಥವಾಗಿ ಎದುರಿಸಿತು. ಮೋದಿಯವರ ಮಾರ್ಗದರ್ಶನದಡಿ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ. ಇದನ್ನು ಒಪ್ಪಿಕೊಳ್ಳಲು ಯಾರೂ ಸಂಕೋಚ ಪಡುವ ಅಗತ್ಯ ಇಲ್ಲ. ಇದನ್ನು ನಮ್ಮ ವಿಪಕ್ಷ ನಾಯಕರು ಮಾಡಬೇಕಿತ್ತು. ನಾವು ಉತ್ತಮ ಆಡಳಿತ ಕೊಟ್ಟಿದ್ದೇವೆ. ನಮ್ಮ ಆಡಳಿತದಲ್ಲಿ ರಾಜ್ಯ ವಿಕಾಸ ಹೊಂದಿದೆ. ಇದರಲ್ಲಿ ಯಾರೂ ಅನುಮಾನ ಪಡುವ ಹಾಗಿಲ್ಲ. ಆರ್ಎಸ್ಎಸ್ ಚಿಂತನೆಗಳನ್ನು ವಿರೋಧಿಸಿದರೆ ಜನ ನಮ್ಮನ್ನು ಗುರುತಿಸುತ್ತಾರೆ ಅಂತ ವಿಪಕ್ಷದವರು ಭ್ರಮೆಯಲ್ಲಿದ್ದಾರೆ ಎಂದು ಅವರು ಹೇಳಿದರು.