ಹೊಸದಿಗಂತ ವರದಿ ವಿಜಯನಗರ:
ವಿಶ್ವವಿಖ್ಯಾತ ಹಂಪಿ ಉತ್ಸವ ಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ ಮೂರು ದಿನ ಉತ್ಸವ ಜರುಗಲಿದ್ದು, ಗತವೈಭವ ಸಾರಲು ಹಂಪಿ ಸಜ್ಜಾಗಿದೆ. ಈ ಬಾರಿಯ ಉತ್ಸವವು ಪರಂಪರೆ ಮತ್ತು ಆಧುನಿಕ ತಂತ್ರಜ್ಞಾನದ ಅದ್ಭುತ ಸಂಗಮಕ್ಕೆ ಸಾಕ್ಷಿಯಾಗಲಿದೆ.
ಹಂಪಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.೧೩ರಂದು ಸಂಜೆ ೬ ಗಂಟೆಗೆ ಅಽಕೃತವಾಗಿ ಚಾಲನೆ ನೀಡಲಿದ್ದಾರೆ. ಉತ್ಸವದ ಅಂಗವಾಗಿ ೬ ವೇದಿಕೆ ನಿರ್ಮಿಸಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಜಮೀರ್ ಅಹಮದ್ ಖಾನ್, ರಾಮಲಿಂಗಾರೆಡ್ಡಿ, ಎಚ್.ಕೆ.ಪಾಟೀಲ್ ಹಾಗೂ ಶಿವರಾಜ್ ತಂಗಡಗಿ ಭಾಗವಹಿಸಲಿದ್ದಾರೆ.
ಫೆ.೧೩ರಂದು ವಿಶ್ವಪಾರಂಪರಿಕ ತಾಣವಾದ ಹಂಪಿ ನಿರ್ವಹಣಾ ಪ್ರಾಧಿಕಾರ ಕಚೇರಿ ಹಿಂಭಾಗ ವಿವಿಧ ತಳಿಗಳ ಎತ್ತುಗಳ ಪ್ರದರ್ಶನ, ರಂಗೋಲಿ ಸ್ಪರ್ಧೆ, ಫಲಪುಷ್ಪ ಪ್ರದರ್ಶನ, ಮತ್ಸ್ಯ ಮೇಳ, ಬೋಟಿಂಗ್, ಹಂಪಿ ವಿಚಾರ ಕುರಿತು ವಿಚಾರ ಸಂಕಿರಣ ಹಾಗೂ ಆಹಾರ ಮೇಳ ಆಯೋಜಿಸಲಾಗಿದೆ. ಫೆ.೧೪ರಂದು ಗ್ರಾಮೀಣ ಕ್ರೀಡೆ, ಸಾಹಸ ಕ್ರೀಡೆಗಳು ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿವೆ.
ಫೆ.೧೩ರಂದು ಮುಖ್ಯ ವೇದಿಕೆಯಾದ ಎಂ.ಪಿ. ಪ್ರಕಾಶ್ ವೇದಿಕೆಯಲ್ಲಿ ಗಣ್ಯರೊಂದಿಗೆ ನಟ ಶಿವರಾಜಕುಮಾರ್, ಅಶ್ವಿನಿ ಪುನೀತ್ ರಾಜ್ಕುಮಾರ್, ರುಕ್ಮಿಣಿ ವಸಂತ್ ವೇದಿಕೆ ಹಂಚಿಕೊಳ್ಳಲಿದ್ದಾರೆ. ವೇದಿಕೆ ಕಾರ್ಯಕ್ರಮದ ನಂತರ ಗಾಯಕ ವಿಜಯ್ ಪ್ರಕಾಶ್ ಮತ್ತು ಹರಿಹರನ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಫೆ.೧೪ರಂದು ಮುಖ್ಯ ವೇದಿಕೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ರಾಜ್ ಬಿ. ಶೆಟ್ಟಿ, ಸಪ್ತಮಿ ಗೌಡ, ಝೈದ್ ಖಾನ್, ಗಿಲ್ಲಿ ಮತ್ತು ಕಾವ್ಯ ಅವರ ವೇದಿಕೆ ಕಾರ್ಯಕ್ರಮ ನಡೆಯಲಿದೆ. ನಂತರ ನವೀನ್ ಸಜ್ಜು, ಅರ್ಜುನ್ ಜನ್ಯ ತಂಡದಿಂದ ಗೀತಗಾಯನ ಪ್ರಸ್ತುತಿ ಪಡಿಸಲಿದ್ದಾರೆ.
ಫೆ.೧೫ರಂದು ಮುಖ್ಯ ವೇದಿಕೆಯಲ್ಲಿ ನಟರಾದ ಡಾಲಿ ಧನುಂಜಯ್, ಧ್ರುವ ಸರ್ಜಾ, ರಚಿತಾರಾಮ್ ವೇದಿಕೆ ಹಂಚಿಕೊಳ್ಳಲಿದ್ದಾರೆ. ನಂತರ ರಘು ದೀಕ್ಷಿತ್, ಮಂಗಲಿ, ಮಣಿಕಾಂತ್ ಖದ್ರಿ ತಂಡದಿಂದ ಗಾಯನ ಏರ್ಪಡಿಸಲಾಗಿದೆ.



