ಹೊಸದಿಗಂತ ಡಿಜಿಟಲ್ ಡೆಸ್ಕ್
ದ್ವೀಪರಾಷ್ಟ್ರ ಶ್ರೀಲಂಕಾ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿದೆ. ಅಗತ್ಯವಸ್ತುಗಳ ಬೆಲೆಏರಿಕೆ, ಅರಾಜಕತೆಗಳಿಂದ ಹತಾಶರಾಗಿರುವ ಜನರು ಅಧ್ಯಕ್ಷ ಗೊಟಬಾಯ ರಾಜಪಕ್ಸಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗಿಳಿದಿದ್ದಾರೆ.
ರಾಜೀನಾಮೆಗೆ ಆಗ್ರಹಿಸಿ ಕೊಲಂಬೊದ ಹೊರವಲಯದ ಮಿರಿಹಿನಾದಲ್ಲಿರುವ ಅಧ್ಯಕ್ಷರ ನಿವಾಸದಕ್ಕೆ ಗುರುವಾರ ರಾತ್ರಿ 2,000 ಕ್ಕೂ ಹೆಚ್ಚು ಜನರು ಮುತ್ತಿಗೆ ಹಾಕಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. “ಮನೆಗೆ ಹೋಗು.., ಗೋಟಾ( ಅಧ್ಯಕ್ಷ) ಮನೆಗೆ ಹೋಗು ಎಂಬ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ರಾಜಪಕ್ಸೆ ನಿವಾಸದ ಭದ್ರತೆಗೆ ನಿಯೋಜನೆಗೊಂಡಿದ್ದ ಎರಡು ಸೇನಾ ಬಸ್ಗಳಿಗೆ ಕಲ್ಲು ತೂರಿದರು. ನಂತರ ಬಸ್ಸುಗಳಿಗೆ ಬೆಂಕಿ ಹಚ್ಚಿದರು, ಅಗ್ನಿಶಾಮಕ ವಾಹನವನ್ನು ತಡೆದಿದ್ದಾರೆ. ಈ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಅಶ್ರುವಾಯು ಮತ್ತು ನೀರಿನ ಫಿರಂಗಿ ಪ್ರಯೋಗಿಸಿದ್ದಾರೆ.ಪ್ರತಿಭಟನೆ ನಡೆಯುತ್ತಿದ್ದಾಗ ಅಧ್ಯಕ್ಷರು ಮನೆಯಲ್ಲಿರಲಿಲ್ಲ ಎಂದು ತಿಳಿದುಬಂದಿದೆ. ಪ್ರತಿಭಟನೆಗಳು ನಿಯಂತ್ರಣಕ್ಕೆ ಬಾರದಿರುವುದರಿಂದ ರಾಜಧಾನಿಯ ಉಪನಗರಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಶ್ರೀಲಂಕಾ ಸರ್ಕಾರವು ಕಳೆದ ವರ್ಷದ ಮಾರ್ಚ್ನಲ್ಲಿ5 ಬಿಲಿಯನ್ ಡಾಲರ್ ವಿದೇಶಿ ಕರೆನ್ಸಿಯನ್ನು ಉಳಿಸುವ ಉದ್ದೇಶದಿಂದ ದೇಶದ ರಫ್ತುಗಳ ಮೇಲೆ ನಿಷೇಧ ಹೇರಿತ್ತು. ಅದೀಗ ದೇಶದ ಆರ್ಥಿಕ ವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ನಿರುದ್ಯೋಗ ಮತ್ತು ಗಗನಕ್ಕೇರುತ್ತಿರುವ ಹಣದುಬ್ಬರದಿಂದ ಜನರು ಕಂಗಾಲಾಗಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ