January17, 2026
Saturday, January 17, 2026
spot_img

ಮಂಗಳೂರು ಏರ್‌ಪೋರ್ಟ್‌ಗೆ ‘ಧ್ವಂಸ’ ಬೆದರಿಕೆ: ಆರೋಪಿ ತಮಿಳುನಾಡಿನಲ್ಲಿ ಪೊಲೀಸ್ ಬಲೆಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಧ್ವಂಸಗೊಳಿಸುವುದಾಗಿ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ವೆಲ್ಲೂರು ನಿವಾಸಿ ಎಂ.ಡಿ. ಸಂಪತ್ ಎಂಬವರ ಪುತ್ರ ಶಶಿಕುಮಾರ್ (38) ಬಂಧಿತ ಆರೋಪಿ.
ಈತ ಆಗಸ್ಟ್ 29ರಂದು ರಾತ್ರಿ ಕರೆ ಮಾಡಿ ಟರ್ಮಿನಲ್ ಕಟ್ಟಡ ತಕ್ಷಣ ಖಾಲಿ ಮಾಡಬೇಕು, ತಪ್ಪಿದಲ್ಲಿ ಅದನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಟರ್ಮಿನಲ್ ಮ್ಯಾನೇಜರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ಆರೋಪಿ ವೆಲ್ಲೂರು ಜಿಲ್ಲೆಯಲ್ಲಿರುವ ಖಚಿತ ಮಾಹಿತಿ ಪಡೆದ ಪೊಲೀಸರು ಇದೀಗ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈತ ದೇಶದ ವಿವಿಧ ವಿಮಾನ ನಿಲ್ದಾಣಗಳ ಸಂಪರ್ಕ ಸಂಖ್ಯೆಗಳನ್ನು ಸಾಮಾಜಿಕ ಜಾಲತಾಣಗಳಿಂದ ಸಂಗ್ರಹಿಸಿ ಈ ಮಾದರಿ ಬೆದರಿಕೆ ಕರೆಗಳನ್ನು ಮಾಡಿರುವುದಾಗಿ ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದಾನೆ.

Must Read

error: Content is protected !!