ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ್ ಪ್ರಸಾದ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರಕಾರ ಅಧಿಕಾರ ವಹಿಸಿಕೊಂಡ 100 ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿ ಇರುವವರು ಮತ್ತು ವಿವಿಧ ಮಾಧ್ಯಮಗಳ ಪ್ರತಿನಿಧಿಗಳ ವಿರುದ್ಧ ಕೇಸು ಹಾಕಲಾಗುತ್ತಿದೆ. ಅವರನ್ನು ಹೆದರಿಸುವ, ಬೆದರಿಸುವ ಪ್ರಕ್ರಿಯೆ ಹೆಚ್ಚಾಗಿದೆ. ರಾಜ್ಯ ಬಿಜೆಪಿ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ಇದರ ಕುರಿತು ಗಮನಿಸಲು ಮತ್ತು ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬಿಜೆಪಿ, ರಾಜ್ಯ ಮಟ್ಟದ ವಕೀಲರ ತಂಡವನ್ನು ರಚಿಸಿದೆ ಎಂದು ಅವರು ತಿಳಿಸಿದ್ದಾರೆ.
ಈ ವಿಚಾರವನ್ನು ಚರ್ಚಿಸಲು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸಭೆ ನಡೆಸಲಾಯಿತು. ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್.ಜಿ.ವಿ., ರಾಜ್ಯ ಉಪಾಧ್ಯಕ್ಷ ನಿರ್ಮಲ್ಕುಮಾರ್ ಸುರಾಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಖ್ಯಾತ ವಕೀಲರು ಭಾಗವಹಿಸಿದ್ದರು ಎಂದು ಅವರು ತಿಳಿಸಿದ್ದಾರೆ.