ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ಹಾಗೂ ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯಲ್ಲಿ ಜಾಗತಿಕ ಹಡಗುಗಳ ಸಂಚಾರಕ್ಕೆ ತೀವ್ರ ಸಂಚಕಾರ ಎದುರಾಗಿದೆ. ಇತ್ತೀಚೆಗೆ ಇರಾನ್ ನಡೆಸಿದ ಭೀಕರ ದಾಳಿಯಲ್ಲಿ ಭಾರತದ ಓರ್ವ ನಾವಿಕ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾಂಪ್ರದಾಯಿಕವಾಗಿ ಇರಾನ್ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದರೂ, ಭಾರತದ ವಾಣಿಜ್ಯ ಹಡಗುಗಳ ಮೇಲೆಯೇ ಈ ದಾಳಿ ನಡೆದಿರುವುದು ಆತಂಕ ಮೂಡಿಸಿದೆ.
ಭಾರತದ ತೀವ್ರ ಆಕ್ರೋಶ: ಇರಾನ್ ರಾಯಭಾರಿಗೆ ಸಮನ್ಸ್
ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಭಾರತದ ‘ಎಂವಿ ಅಲ್ ಬಾಹಿಯಾ’ ಮತ್ತು ‘ಎಂವಿ ಮೊಂಬಾಸಾ’ ಎಂಬ ಎರಡು ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿ ನಡೆಸಲಾದ ಈ ಹಿಂಸಾತ್ಮಕ ಕೃತ್ಯವನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಘಟನೆಯ ಬೆನ್ನಲ್ಲೇ ಭಾರತದಲ್ಲಿನ ಇರಾನ್ ರಾಯಭಾರಿಗೆ ವಿದೇಶಾಂಗ ಇಲಾಖೆ ಸಮನ್ಸ್ ಜಾರಿ ಮಾಡಿದ್ದು, ತನ್ನ ಕಠಿಣ ಸಂದೇಶವನ್ನು ರವಾನಿಸಿದೆ.
ಶಾಂತಿ ಮತ್ತು ರಾಜತಾಂತ್ರಿಕತೆಗೆ ಭಾರತದ ಕರೆ
ಅಂತಾರಾಷ್ಟ್ರೀಯ ಜಲಮಾರ್ಗಗಳಲ್ಲಿ ಮುಕ್ತ ನೌಕಾಯಾನ ಮತ್ತು ನಾಗರಿಕ ಮೂಲಸೌಕರ್ಯಗಳ ರಕ್ಷಣೆ ಅತ್ಯಗತ್ಯ ಎಂದು ಪ್ರತಿಪಾದಿಸಿರುವ ವಿದೇಶಾಂಗ ಸಚಿವಾಲಯವು, ಇಂತಹ ದಾಳಿಗಳು ತಕ್ಷಣವೇ ನಿಲ್ಲಬೇಕು ಎಂದು ಆಗ್ರಹಿಸಿದೆ. ಪಶ್ಚಿಮ ಏಷ್ಯಾದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಮರುಸ್ಥಾಪಿಸಲು ಎಲ್ಲಾ ದೇಶಗಳು ಹಗೆತನವನ್ನು ಮರೆತು, ತಕ್ಷಣವೇ ಮಾತುಕತೆ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳಬೇಕು ಎಂದು ಭಾರತ ಒತ್ತಾಯಿಸಿದೆ.



