ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವತಂತ್ರ ದಿನಾಚರಣೆಯಂದು ಉದ್ಯಮಿ ಮುಕೇಶ್ ಅಂಬಾನಿಗೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಆಗಸ್ಟ್ 30ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಮುಂಬೈನ 37ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಆರೋಪಿಯನ್ನು ಹಾಜರುಪಡಿಸಲಾಗಿತ್ತು. ಆರೋಪಿಯನ್ನು ವಿಶ್ನು ಭೌಮಿಕ್ (56) ಎಂದು ಗುರುತಿಸಲಾಗಿದೆ. ಆರೋಪಿ ದಹಿಸಾರ್ನ ನಿವಾಸಿಯಾಗಿದ್ದು, ಡಿಬಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ನೇರವಾಗಿ ಮುಕೇಶ್ ಅಂಬಾನಿಯವರಿಗೆ ಕರೆ ಮಾಡಿಲ್ಲ. ಆಸ್ಪತ್ರೆಗೆ ಕರೆ ಮಾಡಿ ಮಾತನಾಡಿದ್ದಾರೆ. ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾಗುವ ಆಶಯ ಆರೋಪಿಗೆ ಇರಲಿಲ್ಲ. ಅವರು ಮಾನಸಿಕ ಅಸ್ವಸ್ಥರು. ಅವರು ಮಾನಸಿಕ ತಜ್ಞರ ಬಳಿ ಚಿಕಿತ್ಸೆ ಪಡೆಯುತ್ತಿರುವುದಕ್ಕೆ ದಾಖಲೆಗಳಿವೆ ಎಂದು ಆರೋಪಿ ಪರ ವಕೀಲರು ಜಾಮೀನಿಗಾಗಿ ಮನವಿ ಮಾಡಿದರಾದರೂ ಫಲಿಸಲಿಲ್ಲ.
ಇತ್ತ ಸರ್ಕಾರಿ ವಕೀಲರು, ಇದೊಂದು ಗಂಭೀರ ಪ್ರಕರಣವಾಗಿದ್ದು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಸ್ವತಂತ್ರ ದಿನಾಚರಣೆಯಂದೇ ಬೆದರಿಕೆ ಕರೆ ಮಾಡಲಾಗಿದೆ. ಬೇರೆ ಯಾವುದೇ ದಿನ ಯಾಕೆ ಮಾಡಿಲ್ಲ. ಮುಕೇಶ್ ಅಂಬಾನಿ ಅವರನ್ನೇ ಗುರಿಯಾಗಿಸಿ ಯಾಕೆ ಬೆದರಿಕೆ ಹಾಕಲಾಗಿದೆ. ಬೇರಾವುದೇ ಉದ್ಯಮಿಗೂ ಬೆದರಿಕೆ ಕರೆ ಮಾಡಿಲ್ಲ. ಇದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಆರೋಪಿ ಜತೆ ಯಾರಿದ್ದರು, ಹತ್ಯೆಗೆ ಸಂಚು ರೂಪಿಸಲಾಗಿತ್ತಾ. ಕಾರಣವೇನು ಎಂಬುದರ ಬಗ್ಗೆ ಸುದೀರ್ಘ ವಿಚಾರಣೆಯ ಅಗತ್ಯವಿದೆ ಎಂದು ಪೊಲೀಸ್ ಪರ ವಕೀಲರು ಪ್ರತಿವಾದ ಮಂಡಿಸಿದರು.
ಆರೋಪಿ ಈ ರೀತಿಯ ಪ್ರಕರಣದಲ್ಲಿ ಭಾಗಿಯಾಗಿರುವುದು ಇದು ಮೊದಲೇನಲ್ಲ. ಅವರು ಈ ಹಿಂದೆಯೂ ಈ ರೀತಿಯ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ತಂತ್ರಜ್ಞಾನ ಬಳಸಿ ವಿಚಾರಣೆಯ ಅಗತ್ಯವಿದೆಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಮನವಿಯನ್ನು ಮನ್ನಿಸಿದ ನ್ಯಾಯಾಲಯ ಆಗಸ್ಟ್ 30ರವರೆಗೆ ಪೊಲೀಸ್ ಕಸ್ಟಡಿಗೆ ಆರೋಪಿ ವಿಷ್ಣು ಭೌಮೇಶ್ರನ್ನು ನೀಡಿ ಆದೇಶಿಸಿದೆ.