ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಹಲವು ಭಾಗಗಳಲ್ಲಿ ನೈಋತ್ಯ ಮುಂಗಾರು ಮತ್ತೆ ವೇಗ ಪಡೆದುಕೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರತ ಹವಾಮಾನ ಇಲಾಖೆ ಹಲವು ರಾಜ್ಯಗಳಿಗೆ ಅಲರ್ಟ್ ಘೋಷಿಸಿದೆ.
ಕರಾವಳಿ ಮತ್ತು ಈಶಾನ್ಯ ರಾಜ್ಯಗಳಿಗೆ ಎಚ್ಚರಿಕೆ
ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಸೇರಿದಂತೆ ಈಶಾನ್ಯ ಭಾಗಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಿಗೆ ರೆಡ್ ಅಲರ್ಟ್ ಕೂಡ ಘೋಷಿಸಲಾಗಿದೆ.
ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಮಳೆ ಅಬ್ಬರ
ಮಹಾರಾಷ್ಟ್ರದ ಕೊಂಕಣ ಕರಾವಳಿ ಮತ್ತು ಮುಂಬೈ ಭಾಗಗಳಲ್ಲಿ ಜುಲೈ 2ರವರೆಗೆ ಭಾರೀ ಮಳೆಯ ಮುನ್ಸೂಚನೆ ಇದೆ. ತಮಿಳುನಾಡಿನ ಹಲವು ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಉತ್ತಮ ಮಳೆಯಾಗಲಿದ್ದು, ಕರಾವಳಿ ಪ್ರದೇಶದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ದೆಹಲಿ, ಉತ್ತರ ಭಾರತದಲ್ಲಿ ಮಿಶ್ರ ವಾತಾವರಣ
ರಾಜಧಾನಿ ದೆಹಲಿಯಲ್ಲಿ ಗುಡುಗು, ಮಳೆ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಆದರೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಇನ್ನೂ ತೀವ್ರ ಶಾಖದ ಅಲೆ ಮುಂದುವರಿಯುವ ಸಾಧ್ಯತೆ ಇರುವುದಾಗಿ ಇಲಾಖೆ ತಿಳಿಸಿದೆ.
ಇದನ್ನೂ ಓದಿ:
ಮಾನ್ಸೂನ್ ಮತ್ತಷ್ಟು ವಿಸ್ತರಣೆ
ಮುಂದಿನ ಕೆಲ ದಿನಗಳಲ್ಲಿ ಮಾನ್ಸೂನ್ ಗುಜರಾತ್, ಮಧ್ಯಪ್ರದೇಶ, ಛತ್ತೀಸ್ಗಢ ಹಾಗೂ ಉತ್ತರ ಭಾರತದ ಇನ್ನಷ್ಟು ಭಾಗಗಳಿಗೆ ವಿಸ್ತರಿಸುವ ನಿರೀಕ್ಷೆಯಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಕೆಲವು ಭಾಗಗಳಲ್ಲೂ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ಜನರಿಗೆ ಮುನ್ನೆಚ್ಚರಿಕೆ
ಭಾರೀ ಮಳೆ, ಬಿರುಗಾಳಿ ಮತ್ತು ಪ್ರವಾಹದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ. ಗುಡ್ಡಗಾಡು ಹಾಗೂ ಕರಾವಳಿ ಪ್ರದೇಶದ ನಿವಾಸಿಗಳು ವಿಶೇಷ ಎಚ್ಚರಿಕೆ ವಹಿಸಬೇಕೆಂದು ಸೂಚಿಸಲಾಗಿದೆ.



