ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯರಾತ್ರಿ ರೈಲು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ದಾರುಣ ಘಟನೆ ನೆಲ್ಲೂರಿನ ಆತ್ಮಕೂರು ಬಸ್ ನಿಲ್ದಾಣದ ಅಂಡರ್ ಪಾಸ್ ಓವರ್ ಬ್ರಿಡ್ಜ್ ಬಳಿ ನಡೆದಿದೆ. ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಧರ್ಮವರಂ-ನರಸಾಪುರ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಪುರುಷರು ಮತ್ತು ಒಬ್ಬರು ಮಹಿಳೆ. ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ರೈಲು ಡಿಕ್ಕಿ ಹೊಡೆದ ತಕ್ಷಣ ಮಹಿಳೆಯ ಶವ ರೈಲ್ವೆ ಸೇತುವೆ ಮೇಲಿನಿಂದ ರಸ್ತೆಗೆ ಬಿದ್ದಿದೆ.
ಸೇತುವೆ ಕೆಳಗೆ ಹೋಗುವ ವಾಹನ ಸವಾರರು ಏಕಾಏಕಿ ಭಯಗೊಂಡಿದ್ದು, ಕೂಡಲೇ ಕೆಲವರು ಟ್ರ್ಯಾಕ್ ಕಡೆ ತೆರಳಿ ಪರಿಶೀಲನೆ ನಡೆಸಿದರು. ಹಳಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಕೂಡಲೇ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ರೈಲ್ವೇ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಹಳಿ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಮೃತರ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. ಆಕಸ್ಮಿಕವಾಗಿ ಸಾವನ್ನಪ್ಪಿದರೇ? ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರಾ? ಈ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ. ಹಳಿಯಲ್ಲಿ ನಡೆಯುವಾಗ ರೈಲು ಬರುವುದನ್ನು ಗಮನಿಸಲಿಲ್ಲವೇ? ಇಲ್ಲದಿದ್ದರೆ ಮೂವರು ಸೇರಿ ಆತ್ಮಹತ್ಯೆ ಮಾಡಿಕೊಂಡಿದ್ದಾರಾ? ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.