ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಫೆಂಗಲ್’ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡಿದ ರಾಜಧಾನಿ ಚೆನ್ನೈ ತತ್ತರಿಸಿದ್ದು, ಮೂರು ಜನ ಸಾವನ್ನಪ್ಪಿದ್ದಾರೆ.
ಭಾರೀ ಮಳೆಯಿಂದ ನಗರದ ಹಲವಾರು ಭಾಗಗಳಲ್ಲಿ ಪ್ರವಾಹ ಉಂಟಾಗಿದೆ. 90 ಕಿಮೀ ವೇಗದಲ್ಲಿ ಬಲವಾದ ಗಾಳಿ ಮತ್ತು ಭಾರೀ ಮಳೆಯನ್ನು ತಂದಿರುವ ಚಂಡಮಾರುತವು ಮುಂದಿನ ಕೆಲವು ಗಂಟೆಗಳಲ್ಲಿ ಕ್ರಮೇಣ ದುರ್ಬಲಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ರಕ್ಷಣಾ ಕಾರ್ಯಾಚರಣೆಗೆ ಸೇನೆಯೇ ಇಳಿದಿದೆ.
ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ 44 ಸೆಂ.ಮೀ ಮಳೆಯಾಗಿದ್ದು, 30 ವರ್ಷಗಳಲ್ಲೇ ಅತ್ಯಧಿಕ ಮಳೆಯಾಗಿರುವುದರಿಂದ ಪುದುಚೇರಿಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಗಂಭೀರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಮಾಡಿದ ಮನವಿಯ ಮೇರೆಗೆ ಕೇಂದ್ರಾಡಳಿತ ಪ್ರದೇಶದ ಹಲವು ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಭಾರತೀಯ ಸೇನೆ ಮತ್ತು ಎನ್ಡಿಆರ್ಎಫ್ ತಂಡಗಳನ್ನು ಕರೆಸಲಾಯಿತು.
ತಮಿಳುನಾಡಿನಲ್ಲಿ ಹವಾಮಾನ ವೈಪರೀತ್ಯಕ್ಕೆ ಕಾರಣವಾದ ಸೈಕ್ಲೋನಿಕ್ ಚಂಡಮಾರುತವು ಚೆನ್ನೈನಲ್ಲಿ ಹಲವಾರು ವಿಮಾನಗಳ ಮೇಲೆ ಪರಿಣಾಮ ಬೀರಿತು. ನಿನ್ನೆ ಕೆಲ ಗಂಟೆಗಳ ಕಾಲ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿತ್ತು. ನಂತರ ಭಾನುವಾರ ಮುಂಜಾನೆ 4.00 ಗಂಟೆಗೆ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳು ಪುನರಾರಂಭಗೊಂಡವು.