ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉಡುಪಿಯ ಬೈಂದೂರಿನ ಉದ್ಯಮಿಗೆಟಿಕೆಟ್ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ ಆರೋಪದಲ್ಲಿ ಜೈಲು ಸೇರಿದ್ದ ಚೈತ್ರಾ ಹಾಗೂ ಆಕೆಯ ಸಹಚರ ಶ್ರೀಕಾಂತ್ಗೆ ಸೋಮವಾರ ಜಾಮೀನು ಮಂಜೂರು ಆಗಿದೆ.
ವಂಚನೆ ಪ್ರಕರಣದಲ್ಲಿ ಚೈತ್ರಾ ರ ಹಾಗೂ ಆಕೆಯ ಗ್ಯಾಂಗ್ನಿಂದ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ಪಡೆದು ವಂಚನೆ ಮಾಡಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದಳು. ಜೈಲು ಸೇರಿದ ಎರಡೂವರೆ ತಿಂಗಳ ಬಳಿಕ ಚೈತ್ರಾ ಹಾಗೂ ಆಕೆಯ ಸಹಚರ ಶ್ರೀಕಾಂತ್ ಅವರಿಗೆ ಜಾಮೀನು ಸಿಕ್ಕಿದೆ.
ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ನಲ್ಲಿ ಚೈತ್ರಾ ಪರ ವಕೀಲ ಹರ್ಷ ಮುತಾಲಿಕ್ ಅವರು ವಾದ ಮಂಡಿಸಿದ್ದರು. ಇದನ್ನು ಆಲಿಸಿದ ನ್ಯಾಯಾಲಯವು ಚೈತ್ರಾ ಹಾಗೂ ಶ್ರೀಕಾಂತ್ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ, ಬೆಂಗಳೂರು ಬಿಟ್ಟು ತೆರಳಬಾರದು ಎಂದು ಆದೇಶವನ್ನು ಹೊರಡಿಸಲಾಗಿದೆ. ಜೊತೆಗೆ, ಸಾಕ್ಷಿಗಳ ನಾಶಕ್ಕೆ ಅಥವಾ ಆರೋಪಿಗಳ ವಿರುದ್ಧ ಇರುವ ಸಾಕ್ಷಿದಾರರ ಮೇಲೆ ಪ್ರಭಾವ ಬೀರದಂತೆ ಷರತ್ತು ಹಾಕಲಾಗಿದೆ.
ಇನ್ನು ಚೈತ್ರಾ, ಶ್ರೀಕಾಂತ್ಗೆ ಜಾಮೀನು ಸಿಕ್ಕಿದ್ದರೂ ಇಂದು ಜೈಲಿನಿಂದ ಬಿಡುಗೆ ಆಗುವ ಭಾಗ್ಯ ಸಿಗಲಿಲ್ಲ. ನ್ಯಾಯಾಲಯ ವಿಧಿಸಿದ್ದ 1 ಲಕ್ಷ ರೂ. ಬಾಂಡ್ ಹಾಗೂ ಇಬ್ಬರ ಶೂರಿಟಿ ಇಡುವುದಕ್ಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಚೈತ್ರಾಳ ಜೈಲಿನಿಂದ ಹೊರಬರಲು ಸಾಧ್ಯವಾಗಲಿಲ್ಲ. ಇನ್ನು ನಾಳೆ (ಮಂಗಳವಾರ) ನ್ಯಾಯಾಲಯದ ಅವಧಿಯಲ್ಲಿ ಕೋರ್ಟ್ ವಿಧಿಸಿದ್ದ ಷರತ್ತುಗಳನ್ನು ಪೂರೈಸಿದ ನಂತರ ಪರಪ್ಪನ ಅಗ್ರಹಾರ ಜೈಲಿನಿಂದ ಚೈತ್ರಾ ಮತ್ಉ ಶ್ರೀಕಾಂತ್ ಬಿಡುಗಡೆಯಾಗುವ ಸಾಧ್ಯತೆಯಿದೆ.