ಹೊಸ ದಿಗಂತ ಡಿಜಿಟಲ್ ಡೆಸ್ಕ್
ರಾಜ್ಯ ಬಿಜೆಪಿ ಸರ್ಕಾರ ಮೂರು ವರ್ಷ, ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಸೆ.8 ರಂದು ಆಯೋಜಿಸಿರುವ ಜನೋತ್ಸವ ಕಾರ್ಯಕ್ರಮದ ಸಿದ್ಧತೆ ಕುರಿತು ರಾಜ್ಯ ಬಿಜೆಪಿ ನಾಯಕರ ಸಭೆ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ನಡೆಯಿತು.
ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯ ಬಿಜೆಪಿಯ ಹಿರಿಯ ನಾಯಕರು ಭಾಗಿಯಾಗಿದ್ದು, ಜನೋತ್ಸವ ಸಮಾರಂಭದ ಸಿದ್ದತೆ ಕುರಿತು ಪರಿಶೀಲನೆ ನಡೆಸಿದರು. ಮಂಗಳೂರಿನಲ್ಲಿ ನಡೆದ ಮೋದಿ ಕಾರ್ಯಕ್ರಮ ಯಶಸ್ವಿಯಾಗಿದ್ದು, ಅದಕ್ಕೂ ದೊಡ್ಡ ಮಟ್ಟದ ಯಶಸ್ಸು ಸರ್ಕಾರದ ಸಾಧನಾ ಸಮಾವೇಶಕ್ಕೆ ಸಿಗಬೇಕು. ಅದಕ್ಕೆ ಬೇಕಾದ ಸಿದ್ಧತೆಗಳ ಕುರಿತು ಮಾತುಕತೆ ನಡೆಸಲಾಯಿತು. ಬರುವ ಜನರಿಗೆ ವ್ಯವಸ್ಥೆ ಕಲ್ಪಿಸುವಲ್ಲಿ ಲೋಪವಾಗದಂತೆ ನೋಡಿಕೊಳ್ಳುವ ಕುರಿತು ಚರ್ಚಿಸಲಾಯಿತು.
ಕೇವಲ ಸರ್ಕಾರದ ಜನೋತ್ಸವ ಸಮಾವೇಶ ಮಾತ್ರವಲ್ಲದೆ ಅನೇಕ ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆದಿದ್ದು, ಬಿಜೆಪಿ ನಾಯಕರ ರಾಜ್ಯಪ್ರವಾಸದ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆ ನಡೆಯಿತು.