ಹೊಸದಿಗಂತ ವರದಿ, ಚಿತ್ರದುರ್ಗ:
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಗರದ ಸರ್ಕಾರಿ ಕಲಾ ಕಾಲೇಜು ಹಿಂಭಾಗದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.
ಭಾರತೀಯ ಜನತಾ ಪಾರ್ಟಿ ವತಿಯಿಂದ ಮುರುಘಾಮಠದ ಅನುಭವ ಮಂಟಪದಲ್ಲಿ ಕಳೆದ ಶನಿವಾರ ನಡೆದ ರಾಜ್ಯಮಟ್ಟದ ಜನಪ್ರತಿನಿಧಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು.
ವಿದ್ಯಾರ್ಥಿನಿಲಯದಲ್ಲಿ ಏಸಾದರೂ ಕುಂದು ಕೊರತೆಗಳಿದೆಯಾ ಎಂದು ವಿದ್ಯಾರ್ಥಿನಿಯರನ್ನು ಕೇಳಿದ ಸಚಿವರು, ನಂತರ ಅಲ್ಲಿಯೇ ಬಾಲಕಿಯರೊಂದಿಗೆ ಕುಳಿತು ಊಟ ಸವಿದರು. ಗ್ರಂಥಾಲಯ ಹಾಗೂ ಅಡುಗೆ ಮನೆಯನ್ನು ವೀಕ್ಷಿಸಿ ಎಲ್ಲವನ್ನು ಅಚ್ಚುಕಟ್ಟಾಗಿ ಇಟ್ಟಿರುವುದನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಜೆ.ಸಿ.ವೆಂಕಟೇಶಯ್ಯ ಈ ಸಂದರ್ಭದಲ್ಲಿ ಹಾಜರಿದ್ದರು.