ಹೊಸದಿಗಂತ ವರದಿ, ಮಡಿಕೇರಿ
ಪೊನ್ನಂಪೇಟೆ ಪ್ರಖಂಡ ವಿಶ್ವ ಹಿಂದೂ ಪರಿಷದ್, ಬಜರಂಗದಳ ದುರ್ಗಾವಾಹಿನಿ ಹಾಗೂ ಮಾತೃಶಕ್ತಿ ನೇತೃತ್ವದಲ್ಲಿ ಏ.18ರಂದು ಕೊಡಗಿನ ಗಡಿ ಭಾಗವಾದ ಕುಟ್ಟದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ ನಡೆಯಲಿದೆ.
ಕುಟ್ಟ ಕೊಡವ ಸಮಾಜದಿಂದ ಬೆಳಗ್ಗೆ 10.30ಗಂಟೆಗೆ ಶೋಭಾಯಾತ್ರೆ ಆರಂಭವಾಗಲಿದ್ದು, ಸಿಂಕೋನ ರಸ್ತೆಯವರೆಗೆ ಮೆರವಣಿಗೆ ಸಾಗಲಿದೆ.
ಕುಟ್ಟ ಬಸ್ ನಿಲ್ದಾಣದಲ್ಲಿ ನಡೆಯಲಿರುವ ಬಹಿರಂಗ ಸಭೆಯ ಅಧ್ಯಕ್ಷತೆಯನ್ನು ಪಂದ್ಯಂಡ ಹರೀಶ್ ವಹಿಸಲಿದ್ದು, ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಶ್ರೀ ತತ್ವರೂಪಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಕುಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಚ್ಚಮಾಡ ಸುಬ್ರಮಣಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ವಿಶ್ವಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಜಿ.ಕೃಷ್ಣಮೂರ್ತಿ ಅವರು ಪ್ರಾಸ್ತಾವಿಕ ನುಡಿಯಾಡಲಿದ್ದಾರೆ. ಅಲ್ಲದೆ ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ರಘು ಜಿ. ಸಕಲೇಶಪುರ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಮದ್ಯ ಮಾರಾಟ ನಿಷೇಧ: ಪೊನ್ನಂಪೇಟೆ ತಾಲೂಕಿನ ಕುಟ್ಟದಲ್ಲಿ ಸೋಮವಾರ ನಡೆಯಲಿರುವ ಹಿಂದೂ ಸಮಾಜೋತ್ಸವದ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಏ.17ರ ಮಧ್ಯರಾತ್ರಿ 12 ಗಂಟೆಯಿಂದ 18ರ ಮಧ್ಯರಾತ್ರಿ 12 ಗಂಟೆಯವರೆಗೆ ಕುಟ್ಟ ಹಾಗೂ ಶ್ರೀಮಂಗಲ ಪೊಲೀಸ್ ಠಾಣಾ ಸರಹದ್ದಿನ ಸುತ್ತಮುತ್ತಲ 10 ಕಿ.ಮೀ.ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್, ಮತ್ತು ಕ್ಲಬ್ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ