ಹೊಸದಿಗಂತ ಕಾಸರಗೋಡು:
ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು (ಜುಲೈ 30 ರಂದು ಮಂಗಳವಾರ) ಜಿಲ್ಲಾಧಿಕಾರಿ ಕೆ.ಇನ್ಬಶೇಖರ್ ರಜೆ ಘೋಷಿಸಿದ್ದಾರೆ.
ಜಿಲ್ಲೆಯ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದೆ. ಇದರಿಂದಾಗಿ ಹಲವು ಪ್ರದೇಶಗಳಲ್ಲಿ ನೀರು ತುಂಬಿ ನಿಂತಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಕಾಲೇಜುಗಳು, ರಾಜ್ಯ ಪಠ್ಯಕ್ರಮವನ್ನು ಅನುಸರಿಸುವ ಶಾಲೆಗಳು, ಸಿಬಿಎಸ್ಇ ಶಾಲೆಗಳು, ಐಸಿಎಸ್ ಸಿ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು ಮತ್ತು ಮದ್ರಸಾಗಳಿಗೆ ರಜೆ ಸಾರಲಾಗಿದೆ.
ಈ ಮಧ್ಯೆ ಪೂರ್ವ ನಿರ್ಧರಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.