ಹೊಸದಿಗಂತ ವರದಿ ಚಿಕ್ಕಮಗಳೂರು:
ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿತಾಣ ಎತ್ತಿನ ಭುಜ ಚಾರಣಕ್ಕೆ ಅರಣ್ಯ ಇಲಾಖೆ ತಾತ್ಕಾಲಿಕ ನಿಷೇಧ ಹೇರಿದೆ.
ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಈ ಸಂಬಂಧ ಆದೇಶ ಹೊರಡಿಸಿದ್ದು, ಇಂದಿನಿಂದ ಜುಲೈ 31ರ ವರೆಗೆ ಚಾರಣವನ್ನು ನಿರ್ಭಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಮಳೆ ಮುಂದುವರೆದಿರುವ ಜೊತೆಗೆ ಈ ಪ್ರದೇಶದಲ್ಲಿ ವ್ಯಾಪಕ ಮಂಜುಕವಿದಿರುತ್ತದೆ. 7 ಕಿ.ಮೀ. ಚಾರಣದ ಮೂಲಕ ಎತ್ತಿನಭುಜ ತಲುಪಬೇಕಾಗುತ್ತದೆ. ಧಾರಕಾರ ಮಳೆಯಾಗುತ್ತಿರುವುದರಿಂದ ರಸ್ತೆಗಳು ಜಾರುತ್ತಿದ್ದು, ಕೆಲ ಮರಗಳು ಬೀಳುವ ಸ್ಥಿತಿಯಲ್ಲಿವೆ ಅಲ್ಲದೇ ಇಲ್ಲಿ ಕಾಡು ಪ್ರಾಣಿಗಳು ಹೆಚ್ಚಾಗಿರುವುದರಿಂದ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚು ಈ ಎಲ್ಲಾ ಕಾರಣದಿಂದ ಇಂದಿನಿಂದ ಒಂದು ತಿಂಗಳ ಕಾಲ ಚಾರಣ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಡಿಎಫ್ಓ ತಿಳಿಸಿದ್ದಾರೆ.
ಈ ಬಗ್ಗೆ ಪ್ರವಾಸಿಗರಿಗೆ ಮನವರಿಕೆ ಮಾಡಲು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ. ಪ್ರವಾಸಿಗರ ಸುರಕ್ಷತೆಗೆ ಪ್ರಾಮುಖ್ಯತೆ ನೀಡಿರುವ ಅರಣ್ಯ ಇಲಾಖೆಯ ಈ ಕ್ರಮಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಭಾಗದಲ್ಲಿ ಚಾರಣವನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಒತ್ತಾಯ ಕೇಳಿಬಂದಿತ್ತು.