ಹೊಸದಿಗಂತ ವರದಿ ದಾವಣಗೆರೆ:
ವರಮಹಾಲಕ್ಷ್ಮೀ ಹಬ್ಬ ಮುಗಿಸಿಕೊಂಡು ತವರು ಮನೆಯಿಂದ ವಾಪಸಾಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ದಾವಣಗೆರೆಯ ಆನಗೋಡು ಸಮೀಪದ ಆರಾಧ್ಯ ಫ್ಯಾಕ್ಟರಿ ಬಳಿ ನಡೆದಿದೆ.
ಆನಗೋಡು ಗ್ರಾಮದ ಲಕ್ಷ್ಮೀ(28) ಮೃತ ಮಹಿಳೆ. ಅಪಘಾತದಲ್ಲಿ ಮೃತಳ ತಂದೆ ಕೃಷ್ಣಪ್ಪ(62) ಗಂಭೀರವಾಗಿ ಗಾಯಗೊಂಡಿದ್ದು, ಪುತ್ರಿ ಶರಣ್ಯಳಿಗೂ(5) ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವರಮಹಾಲಕ್ಷ್ಮೀ ಹಬ್ಬ ಆಚರಿಸಲು ಚಿತ್ರದುರ್ಗಕ್ಕೆ ತೆರಳಿದ್ದ ಲಕ್ಷ್ಮೀ, ಹಬ್ಬ ಮುಗಿಸಿಕೊಂಡು ತಂದೆಯ ಜೊತೆಗೆ ಬೈಕ್ನಲ್ಲಿ ಗಂಡನ ಮನೆ ಆನಗೋಡಿಗೆ ಬರುತ್ತಿದ್ದಾಗ ಹಿಂಬದಿಯಿಂದ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:
ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಹಿರಿಯೂರಿನ ಪ್ರವಾಸದಲ್ಲಿದ್ದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ, ಸ್ಥಳೀಯ ಶಾಸಕ ಕೆ.ಎಸ್.ಬಸವಂತಪ್ಪ, ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ ದಾವಣಗೆರೆಗೆ ಧಾವಿಸಿದರು. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಮೃತಳ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.



