ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಪ್ರದೇಶದಲ್ಲಿ ನಡೆಯುತ್ತಿದ್ದ ಸೇತುವೆ ವಿಸ್ತರಣೆ ಕಾಮಗಾರಿ ಕ್ಷಣಾರ್ಧದಲ್ಲಿ ಭೀಕರ ದುರಂತಕ್ಕೆ ತಿರುಗಿದೆ.
ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆಯ ಒಂದು ಭಾಗ ಏಕಾಏಕಿ ಕುಸಿದ ಪರಿಣಾಮ, ಅದರ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡ ಘಟನೆ ಆತಂಕ ಮೂಡಿಸಿದೆ.
ಬಂಟಲಾಬ್ನ ಥಾರ್ ಪ್ರದೇಶದಲ್ಲಿ ನಡೆದ ಈ ಅವಘಡದಲ್ಲಿ ಹಲವು ಕಾರ್ಮಿಕರು ಗಂಭೀರವಾಗಿ ಸಿಲುಕಿಕೊಂಡಿದ್ದು, ಕನಿಷ್ಠ 7 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರಕ್ಷಣಾ ಕಾರ್ಯಾಚರಣೆ ತಕ್ಷಣ ಆರಂಭಿಸಲಾಯಿತು.
ಇದನ್ನೂ ಓದಿ:
ಜಮ್ಮು-ಕಾಶ್ಮೀರ ಪೊಲೀಸ್, ಎಸ್ಡಿಆರ್ಎಫ್ ತಂಡ, ಭಾರತೀಯ ಸೇನೆ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಅವಶೇಷ ತೆರವು ಕಾರ್ಯಾಚರಣೆ ಮುಂದುವರಿದಿದೆ. ಈಗಾಗಲೇ ಇಬ್ಬರು ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಅವಘಡಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕಾಮಗಾರಿ ವೇಳೆ ಸುರಕ್ಷತಾ ಕ್ರಮಗಳಲ್ಲಿ ಲೋಪವಿತ್ತೇ ಎಂಬ ಅನುಮಾನವೂ ವ್ಯಕ್ತವಾಗಿದ್ದು, ಅಧಿಕಾರಿಗಳು ಘಟನೆ ಕುರಿತು ಪರಿಶೀಲನೆ ಆರಂಭಿಸಿದ್ದಾರೆ.



