ಹೊಸದಿಗಂತ ವರದಿ ಬೆಳಗಾವಿ :
ರಾಜ್ಯಾದ್ಯಂತ ನಾಗರ ಪಂಚಮಿಯ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ ಆದರೆ, ರಾಯಬಾಗ ಪಟ್ಟಣದಲ್ಲಿ, ನಾಗರ ಮೂರ್ತಿಗೆ ಪೂಜೆ ಸಲ್ಲಿಸಿ ಹಾಲೆರೆಯುತ್ತಿದ್ದ ದಿನವೇ ಮುಹಿಳೆಯೊಬ್ಬರಿಗೆ, ಹೊಲದಲ್ಲಿ ಕಸ ತೆಗೆಯುತ್ತಿದ್ದ ಮಹಿಳೆಯೊಬ್ಬರಿಗೆ ವಿಷಕಾರಿ ಹಾವು ಕಚ್ಚಿ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತಪಟ್ಟಿರುವ ದಾರುಣ ಘಟನೆಯೊಂದು ಸೋಮವಾರ ನಡೆದಿದೆ.
ಮೃತ ಮಹಿಳೆ ರಾಯಬಾಗ ಪಟ್ಟಣದ ಅಂಬೇಡ್ಕರ್ ನಗರದ ನಿವಾಸಿ ಸತ್ಯವ್ವ ಶಿವಾನಂದ ಶಿಂಗೆ (43) ಎಂದು ಗುರುತಿಸಲಾಗಿದೆ.
ಕುಟುಂಬದ ಆರ್ಥಿಕ ಸಂಕಷ್ಟ ನೀಗಿಸಲು ದಿನನಿತ್ಯದಂತೆ ಸತ್ಯವ್ವ ಅವರು ಸೋಮವಾರ ಹೊಲದಲ್ಲಿ ಕಸ ತೆಗೆಯುವ ಕೆಲಸಕ್ಕೆ ತೆರಳಿದ್ದರು. ಕೆಲಸ ಮಾಡುತ್ತಿದ್ದ ವೇಳೆ ಹೊಲದಲ್ಲಿ ಅಡಗಿದ್ದ ವಿಷಕಾರಿ ಕೊಳಕು ಮಂಡಲ ಹಾವು ಏಕಾಏಕಿ ಅವರಿಗೆ ಕಚ್ಚಿದೆ. ಹಾವು ಕಚ್ಚಿದ ತಕ್ಷಣ ತೀವ್ರ ಅಸ್ವಸ್ಥಗೊಂಡ ಅವರನ್ನು ಕುಟುಂಬಸ್ಥರು ಹಾಗೂ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಸತ್ಯವ್ವ ಕೊಣೆ ಉಸಿರು ಎಳೆದಿದ್ದಾಳೆ.
ಕುಟುಂಬಕ್ಕೆ ಆಧಾರವಾಗಿದ್ದ ಸತ್ಯವ್ವ ಅವರ ಅಕಾಲಿಕ ಸಾವಿನಿಂದ ಮಕ್ಕಳ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ನಾಗರ ಪಂಚಮಿ ಹಬ್ಬದ ದಿನವೇ ಸಂಭವಿಸಿದ ಈ ದುರಂತದಿಂದ ಕುಟುಂಬದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.



