ಹೊಸದಿಗಂತ ವರದಿ ಮಡಿಕೇರಿ:
ಆನೆ ದಂತದಲ್ಲಿ ಸುಂದರವಾಗಿ ಕೆತ್ತಲಾಗಿರುವ ಟ್ರೋಫಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ರಫೀಕ್ ಅಹಮದ್ ಖಾನ್ ಮತ್ತು ಫಾಜಿಲ್ ಖಾನ್ ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ.
ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಚೈನ್ಗೇಟ್ ಬಳಿಯಲ್ಲಿರುವ ಹಿಂದೂ ರುದ್ರ ಭೂಮಿಯ ಮುಂಭಾಗದ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಆನೆ ದಂತದ ಟ್ರೋಫಿಯನ್ನು ಇಟ್ಟುಕೊಂಡು ಅದನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮೇ 7ರಂದು ಮಡಿಕೇರಿ ತಾಲೂಕು ಸಿ.ಐ.ಡಿ ಪೊಲೀಸ್ ಅರಣ್ಯ ಸಂಚಾರಿ ದಳಕ್ಕೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿ ಆಧರಿಸಿ ಸಿಬ್ಬಂದಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಮಾಲು ಸಹಿತ ಬಂಧಿಸಿದ್ದಾರೆ. ಆರೋಪಿಗಳ ವಶದಲ್ಲಿದ್ದ ಒಂದು ಆನೆ ದಂತದ ಟ್ರೋಫಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಎನ್.ಟಿ. ಶ್ರೀನಿವಾಸ್ ರೆಡ್ಡಿ ಮಾರ್ಗದರ್ಶನದಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಉಪ ನಿರೀಕ್ಷಕಿ ಸಿ.ಯು. ಸವಿ, ಸಿಬ್ಬಂದಿ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ, ಸ್ವಾಮಿ ಮತ್ತು ಮಂಜುನಾಥ್ ಕಾರ್ಯಾಚರಣೆ ನಡೆಸಿದರು.