ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವಸ್ಥಾನ ದರುಶನಕ್ಕಾಗಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯಾತ್ರಿಕರ ಗುಂಪಿನ ಮೇಲೆ ಟ್ರಕ್ ಹರಿದ ಪರಿಣಾಮ 7 ಜನ ಸಾವನಪ್ಪಿದ ಘಟನೆ ಗುಜರಾತ್ನ ಸುರೇಂದ್ರನಗರ ಜಿಲ್ಲೆಯಲ್ಲಿ ನಡೆದಿದೆ.
ರಾಜ್ಕೋಟ್ನ ಗಡ್ಕಾ ಗ್ರಾಮದಿಂದ ದೇಕಾವಾಲಾ ದೇವಸ್ಥಾನದತ್ತ ಭಕ್ತರ ತಂಡ ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿತ್ತು. ಲಖ್ತಾರ್–ವಿರಮ್ಗಮ್ ಹೆದ್ದಾರಿಯ ಭಾಸ್ಕರ್ಪಾರ ಸಮೀಪ ಈ ಘಟನೆ ನಡೆದಿದೆ. ರಸ್ತೆ ಬದಿಯಲ್ಲಿ ಟೈರ್ ಬದಲಾವಣೆಗೆ ನಿಲ್ಲಿಸಿದ್ದ ಡಂಪರ್ ಟ್ರಕ್ ಅನ್ನು ದಾಟುವ ವೇಳೆ, ಹಿಂದಿನಿಂದ ಬಂದ ವೇಗದ ಟ್ರಕ್ ನಿಯಂತ್ರಣ ತಪ್ಪಿ ಯಾತ್ರಿಕರ ಗುಂಪಿಗೆ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ಆರು ಯಾತ್ರಿಕರು ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡ ಡಂಪರ್ ಚಾಲಕ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ:
ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದು, ಅವನಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.
ಈ ದುರ್ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



