ಗಂಗಾ ಕಲ್ಯಾಣ ಯೋಜನೆಯಡಿ 17 ಸಾವಿರ ಫಲಾನುಭವಿಗಳಿಗೆ ಕೊಳವೆ ಬಾವಿ ಸೌಲಭ್ಯ: ಸಚಿವ ಕೋಟ

ಹೊಸದಿಗಂತ ವರದಿ, ಮೈಸೂರು:

ಗಂಗಾ ಕಲ್ಯಾಣ ಯೋಜನೆಯಡಿ 17 ಸಾವಿರ ಕೊಳವೆಬಾವಿಗಳನ್ನು ಕೊರೆಸಿ ಪಲಾನುಭವಿಗಳಿಗೆ ನೀಡಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಸೋಮವಾರ ಮೈಸೂರಿನ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ವತಿಯಿಂದ ಹಮ್ಮಿಕೊಂಡಿದ್ದ ವಿಭಾಗ ಮಟ್ಟದ ಅರಿವು ಮೂಡಿಸುವ ಕಾರ್ಯಾಗಾರ ಹಾಗೂ ಸವಲತ್ತು ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಹಿಂದೆ ಕೊಳವೆ ಬಾವಿ ಕೊರೆದ ಹಣವನ್ನು ಏಜೆನ್ಸಿಗಳಿಗೆ ನೀಡಲಾಗುತಿತ್ತು. ಆದರೆ ಈಗ ಪಾರದರ್ಶಕತೆಯನ್ನು ಕಾಪಾಡಲು ಪಲಾನುಭವಿಗಳ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಹಿಂದೆ ಶಿಕ್ಷಣ, ಸಂಪತ್ತು, ಅಭಿವೃದ್ದಿ ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿದ್ದವು. ವೈದ್ಯರ ಮಗ ವೈದ್ಯ, ಅಧಿಕಾರಿಯ ಮಗ ಅಧಿಕಾರಿ ಆಗುತ್ತಿದ್ದರು. ಆದರೆ ಡಾ.ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿ ಎಲ್ಲಾ ವರ್ಗದವರಿಗೂ ಅವಕಾಶಗಳನ್ನು ಕಲ್ಪಿಸಿದರು. ಇದರಿಂದ ಇಂದು ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಬಡವರ ಮಕ್ಕಳು ಸಹ ವೈದ್ಯರಾಗುವ ಹಾಗೂ ಅಧಿಕಾರಿಗಳಾಗುವ ಅವಕಾಶ ದೊರಕಿದೆ ಎಂದು ತಿಳಿಸಿದರು.
ಅರ್ಥಿಕವಾಗಿ ಹಿಂದುಳಿದ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳ ಸೌಲಭ್ಯಗಳು ಪಾರದರ್ಶಕವಾಗಿ ದೊರೆಯಬೇಕು ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕರ್ತವ್ಯ ನಿರ್ವಹಿಸುತ್ತಿದೆ. ಯೋಜನೆಗಳ ದುರುಪಯೋಗ ತಡೆಯಲು ಫಲಾನುಭವಿಗಳ ಆದಾರ್ ಕಾರ್ಡ್ ಲಿಂಕ್‌ನ್ನು ಕಡ್ಡಾಯ ಮಾಡಲಾಗಿದೆ. ಒಮ್ಮೆ ಫಲಾನುಭವಿಗಳಾದವರು ಮತ್ತೆ ಅರ್ಜಿ ಸಲ್ಲಿಸಬಾರದು. ಇತರೆ ಅರ್ಹ ಫಲಾನುಭವಿಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಪ್ರತಿಷ್ಟಿತ ಶಾಲೆಗಳಲ್ಲಿ ಪೌರಕಾರ್ಮಿಕರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾತಿಯನ್ನು ಸರ್ಕಾರ ಹೆಚ್ಚಳ ಮಾಡಿ ಅನುಕೂಲ ಮಾಡಿಕೊಟ್ಟಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಬಿ.ಪಿ.ಎಲ್ ಕುಟುಂಬದವರಿಗೆ 75 ಯುನಿಟ್ ವರೆಗೆ ಉಚಿತ ವಿದ್ಯುತ್‌ನ್ನು ನೀಡಲಾಗುವುದು ಎಂದು ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಹೆಚ್.ನಾಗೇಶ್ ಅವರು ಮಾತನಾಡಿ ನಿಗಮದ ವತಿಯಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅರ್ಹರು ಇದರ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಬೀದಿ ಬದಿ ವ್ಯಾಪಾರಿಗಳಿಗೆ ನೇರ ಸಾಲ, ಸ್ತ್ರಿ ಶಕ್ತಿ ಸಂಘಗಳಿಗೆ ಸಾಲ ಯೋಜನೆ, ಗಂಗ ಕಲ್ಯಾಣ ಯೋಜನೆ, ಗೂಡ್ಸ್ ವಾಹನಗಳ ಖರೀದಿಗೆ ಸಬ್ಸಿಡಿ ಮುಂತಾದ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ ಅಭಿವೃದ್ದಿ ಹೊಂದಿ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಎಲ್ ನಾಗೇಂದ್ರ ಮಾತನಾಡಿ, ಜಿಲ್ಲೆಯಲ್ಲಿ ಅತಿ ದೊಡ್ಡ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣವನ್ನು ಮೈಸೂರಿನಲ್ಲಿ ಮಾಡಲಾಗುತ್ತಿದೆ. ಇನ್ನೂ ಅಗತ್ಯವಿರುವ 16.5 ಕೋಟಿ ರೂಗಳನ್ನು ತಂದು 3 ತಿಂಗಳೊಳಗೆ ಭವನವನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೈಸೂರು ವಿಭಾಗದ ಒಟ್ಟು 870 ಫಲಾನುಭವಿಗಳಿಗೆ ಸೌಲಭ್ಯ ವಿತರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ನೇರ ಸಾಲ ಯೋಜನೆಯಲ್ಲಿ 150 ಫಲಾನುಭವಿಗಳು, ಉದ್ಯಮ ಶೀಲತಾ ಯೋಜನೆಯಡಿ 150 ಫಲಾನುಭವಿಗಳು, ಗಂಗಾ ಕಲ್ಯಾಣ ಯೋಜನೆಯಡಿ 57 ಫಲಾನುಭವಿಗಳು, ಪ್ರೇರಣಾ ಯೋಜನೆಯಡಿ 500 ಫಲಾನುಭವಿಗಳು ಹಾಗೂ ಐರಾವತ ಯೋಜನೆಯಡಿ 5 ಫಲಾನುಭವಿಗಳು ಸವಲತ್ತುಗಳ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ಹರ್ಷವರ್ಧನ, ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸಗೌಡ, ನಗರಪಾಲಿಕೆ ಮೇಯರ್ ಶಿವಕುಮಾರ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಶಿವಣ್ಣ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಸುರೇಶ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!