ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿಯವರ ಸುಗಮ ಸಂಚಾರ, ಭದ್ರತೆ ಹಾಗೂ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಸೆಪ್ಟಂಬರ್ 2ರ ಬೆಳಗ್ಗೆ 6 ಗಂಟೆಯಿಂದ ಪ್ರಧಾನಿಯವರ ನಿರ್ಗಮನ ವೇಳೆಯ ತನಕ ಮಂಗಳೂರು ನಗರದಲ್ಲಿನ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದು, ಎಲ್ಲೆಲ್ಲಿ ಮಾರ್ಗ ಬದಲಾವಣೆ ಎಂಬ ವಿವರ ಇಲ್ಲಿದೆ….
ಮಂಗಳೂರು ವಿಮಾನ ನಿಲ್ದಾಣದಿಂದ ಕಂಜಾರು, ಮರವೂರು, ಮರಕಡ, ಕಾವೂರು, ಬೊಂದೇಲ್, ಪದವಿನಂಗಡಿ, ಯೆಯ್ಯಾಡಿ ರಾಷ್ಟ್ರೀಯ ಹೆದ್ದಾರಿ ೬೬ ರ ಕೆ.ಪಿ.ಟಿ. ಜಂಕ್ಷನ್ನಿಂದ ಕೊಟ್ಟಾರ ಚೌಕಿ ಕೂಳೂರು ಎನ್ಎಂಪಿಎವರೆಗೆ ಹಾದು ಹೋಗುವ ರಸ್ತೆಗಳ ಎರಡೂ ಬದಿಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ಬೆಳಗ್ಗೆ 6ರಿಂದ ಸಂಜೆ 6ರ ತನಕ ನಿಷೇಧಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಂಗ್ರಕೂಳೂರು ಗೋಲ್ಡ್ ಪಿಂಚ್ ಮೈದಾನದ ಮತ್ತು ಸುತ್ತಲಿನ 500 ಮೀಟರ್ ವ್ಯಾಪ್ತಿಯ ರಸ್ತೆಗಳಲ್ಲಿ ಮುಂಜಾನೆ 6ರಿಂದ ಸಂಜೆ 5ರ ತನಕ ಎಲ್ಲಾ ತರಹದ ವಾಹನಗಳ ನಿಲುಗಡೆ ನಿಷೇಧಿಸಿದೆ.
ಬಂಗ್ರ ಕೂಳೂರು ಗೋಲ್ಡ್ ಪಿಂಚ್ ಸಿಟಿ ಮೈದಾನದ ಸಾರ್ವಜನಿಕ ಸಮಾವೇಶಕ್ಕೆ ಆಗಮಿಸುವ ಅತೀ ಗಣ್ಯ ವ್ಯಕ್ತಿಗಳು, ಗಣ್ಯ ವ್ಯಕ್ತಿಗಳು, ಫಲಾನುಭವಿಗಳು ಮತ್ತು ಸಾರ್ವಜನಿಕರು ಉಪಯೋಗಿಸುವ ವಾಹನಗಳನ್ನು ನಿಗದಿತ ಪಾರ್ಕಿಂಗ್ ಸ್ಥಳಗಳಿಗೆ ಸಂಚರಿಸಲು ಮತ್ತು ತುರ್ತು ಸೇವೆಯ ವಾಹನಗಳು ಮೇಲ್ಕಂಡ ನಿಷೇಧಿತ ರಸ್ತೆಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ.