ಹೊಸದಿಂತ ವರದಿ,ಕಲಬುರಗಿ:
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ ತುಘಲಕ್ ರೀತಿಯ ಆಡಳಿತ ನಡೆಯುತ್ತಿದೆ. ಅಲ್ಲದೇ ಉದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ಜಿಲ್ಲೆಯ ಆಳಂದ ತಾಲೂಕಿನ ಆಡಳಿತ ಸೌಧದ ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಳೆದ 9 ವರ್ಷಗಳಲ್ಲಿ ಬೀದರ್ ಲೋಕಸಭಾ ಕ್ಷೇತ್ರದಾದ್ಯಂತ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದೇನೆ. ಈ ಹಿಂದೆ ಆಳಂದ ಮತಕ್ಷೇತ್ರದಲ್ಲಿ ಬಿಜೆಪಿ ಶಾಸಕರ ಜೊತೆಗೆ ಸೇರಿಕೊಂಡು ರಾಜ್ಯ ಸರ್ಕಾರದ ಸಹಕಾರದೊಂದಿಗೆ ಕಾರ್ಯನಿರ್ವಹಿಸಿದ್ದೇನೆ. ಅಲ್ಲದೇ ಕ್ಷೇತ್ರಕ್ಕೆ 8 ಕೋ. ಸಂಸದರ ನಿಧಿ ವಿನಿಯೋಗ ಮಾಡಿದ್ದೇನೆ ಅದರ ಕಾರ್ಯಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ತುಘಲಕ್ ರೀತಿಯ ಆಡಳಿತ ನೀಡುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕೇವಲ ಅಲ್ಪಸಂಖ್ಯಾತರ ತುಷ್ಠೀಕರಣ ಮಾಡುವುದರಲ್ಲಿ ಕಾಲಹರಣ ಮಾಡುತ್ತಿದ್ದು, ದಲಿತರಿಗೆ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಹೊಂದಿಸುತಿದ್ದಾರೆ ಈ ಮೂಲಕ ದಲಿತರನ್ನು ಅಭಿವೃದ್ಧಿಯ ಪಥದಿಂದ ದೂರ ಮಾಡಲಾಗುತ್ತಿದೆ ಎಂದರು.
ಆಳಂದ ಮತಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರ, ಬೆಂಬಲಿಗರ ಅಟ್ಟಹಾಸಕ್ಕೆ ಹೆದರುವುದಿಲ್ಲ. ಭಾಜಪ ಕಾರ್ಯಕರ್ತರಿಗೆ ಅನ್ಯಾಯವಾದರೆ ಸಹಿಸುವುದಿಲ್ಲ ಸಿದ್ಧಾಂತದೊಂದಿಗೆ ಹೋರಾಟ ಮಾಡುತ್ತೇವೆ ಎಂದರು.
ಬೀದರ್ ಕಲಬುರಗಿ ರೈಲು ಮಾರ್ಗದ ಸರ್ವೇ ಈಗಾಗಲೇ ಪೂರ್ಣಗೊಂಡಿದೆ ಅಲ್ಲದೇ ಲಾತೂರ- ಕಲಬುರಗಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಕುರಿತು ಬಹುತೇಕ ಆಡಳಿತಾತ್ಮಕ ಕಾರ್ಯ ಮುಗಿದಿದೆ ಎಂದರು.