ಹೊಸದಿಗಂತ ವರದಿ, ಶಿವಮೊಗ್ಗ :
ಗಿಡಗಳನ್ನು ನೆಟ್ಟು ಪರಿಸರ ಉಳಿಸಿದರೆ ಮಾತ್ರ ನಾಡು ಸಮೃದ್ಧವಾಗಿ ಜನರ ದಾರಿದ್ರ್ಯವೂ ಹೋಗಲಿದೆ ಎಂದು ಎಂದು ಪದ್ಮಶ್ರೀ ಪುರಸ್ಕೃತ ಜನಪದ ಕಲಾವಿದೆ ಹಾಗೂ ಪರಿಸರ ಪ್ರೇಮಿ ತುಳಸಿಗೌಡ ಹೇಳಿದರು.
ನಗರದ ಕೋಟೆ ಚಂಡಿಕಾದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸೋಮವಾರ ಆಯೋಜಿಸಿದ್ದ ದಸರಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಹಬ್ಬಗಳ ಆಚರಣೆ ಮುಖ್ಯವಾಗಿದೆ. ಈ ಉತ್ಸವ ನೋಡಿ ಖುಷಿಯಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಯಾಗಿದ್ದ ಶಾಸಕ ಕೆ.ಎಸ್. ಈಶ್ವರಪ್ಪ ಮಾತನಾಡಿ, ಅಸುರ ಶಕ್ತಿಯ ದಮನದ ಸಂಕೇತವಾಗಿ ದಸರಾವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಭಾರತದಲ್ಲಿ ಹಿಂದಿನಿಂದಲೂ ಇಂತಹ ದುಷ್ಟ ಶಕ್ತಿಗಳು ಅಟ್ಟಹಾಸ ಮೆರೆಯುತ್ತಲೇ ಬಂದಿವೆ. ಈಗಲೂ ಅದು ಇದೆ. ಆದರೆ ಅಂತಹ ಶಕ್ತಿಗಳನ್ನು ಮಟ್ಟ ಹಾಕಲಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮೇಯರ್ ಸುನೀತಾ ಅಣ್ಣಪ್ಪ, ರಾಜ್ಯದಲ್ಲಿ ಮೈಸೂರು ಬಿಟ್ಟರೆ ಶಿವಮೊಗ್ಗ ದಸರಾ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ. ಈ ಬಾರಿ ಅತ್ಯಂತ ವೈಭವಯುತವಾಗಿ ಆಚರಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದರು.
ಇದಕ್ಕೂ ಮುನ್ನ ಬೆಳ್ಳಿ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿಯನ್ನು ಮಹಾನಗರ ಪಾಲಿಕೆ ಆವರಣದಿಂದ ಕೋಟೆ ಚಂಡಿಕಾ ದುರ್ಗಾ ಪರಮೇಶ್ವರಿ ದೇವಾಲಯದವರೆಗೆ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪಿಸಲಾಯಿತು.
ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ, ಉಪಮೇಯರ್ ಶಂಕರ್ ಗನ್ನಿ, ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್, ಪಾಲಿಕೆ ಸದಸ್ಯರಾದ ವಿಶ್ವನಾಥ್, ಜ್ಞಾನೇಶ್ವರ್, ಸುವರ್ಣ ಶಂಕರ್, ಹೆಚ್.ಸಿ. ಯೋಗೀಶ್, ಕಲ್ಪನಾ ರಮೇಶ್, ಅನಿತಾ ರವಿಶಂಕರ್, ಮಂಜುನಾಥ್, ವಿಶ್ವಾಸ್, ಶಿವಕುಮಾರ್, ರಾಜು, ಮಂಜುಳಾ ಶಿವಣ್ಣ, ಲಕ್ಷ್ಮೀ ಶಂಕರನಾಯ್ಕಘಿ, ಸುರೇಖಾ ಮುರಳೀಧರ್, ಸಂಗೀತಾ ನಾಗರಾಜ್, ಶಿರೀಶ್, ಸೂಡಾ ಅಧ್ಯಕ್ಷ ಎನ್.ಜಿ. ನಾಗರಾಜ್, ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಮಾರಪ್ಪ ಇದ್ದರು.