ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ರೈಲ್ವೆ ನಿಲ್ದಾಣ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಈ ಕುರಿತಂತೆ ಮೂಲಸೌಲಭ್ಯ ಅಭಿವೃದ್ಧಿ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸರ್ಕಾರ ಕಾರ್ಯದರ್ಶಿ ಡಾ.ಎನ್ ಮಂಜುಳ ಅವರು ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಸರ್ಕಾರವು ತುಮಕೂರು ರೈಲು ನಿಲ್ದಾಣವನ್ನು ಭಾರತೀಯ ರೈಲ್ವೆಯ ನೈಋತ್ಯ ರೈಲ್ವೆ (SWR) ವಲಯದ ‘TK’ ನಿಲ್ದಾಣದ ಕೋಡ್ ಹೆಸರಿನೊಂದಿಗೆ ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡುವ ಪ್ರಸ್ತಾಪವನ್ನು ಅನುಮೋದಿಸಿದೆ ಎಂದಿದ್ದಾರೆ.
ವೀರಶೈವ ಮತ್ತು ಲಿಂಗಾಯತ ಮಠಗಳು ರಾಜ್ಯದಲ್ಲಿ ಸಾಕ್ಷರತೆ, ಶಿಕ್ಷಣ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಉತ್ತಮ ಕೊಡುಗೆ ನೀಡಿವೆ. ಈ ಎಲ್ಲಾ ವೀರಶೈವ ಲಿಂಗಾಯತ ಮಠಗಳಲ್ಲಿ, ಶ್ರೀ ಸಿದ್ದಗಂಗಾ ಮಠವು ರಾಜ್ಯದ ಎಲ್ಲಾ ಸಮುದಾಯಗಳಿಗೆ ಸೇರಿದ ಜನರ ಹೃದಯದಲ್ಲಿ ಬಹಳ ಪ್ರಮುಖ ಸ್ಥಾನವನ್ನು ಹೊಂದಿದ್ದಾರೆ. ಹಲವು ದಶಕಗಳಿಂದ, ಸಿದ್ದಗಂಗಾ ಮಠವು ವಂಚಿತರು, ದೀನದಲಿತರಿಗೆ ಅವರ ಉನ್ನತಿಗಾಗಿ ಆಹಾರ, ವಸತಿ ಮತ್ತು ಶಿಕ್ಷಣವನ್ನು ಒದಗಿಸುವ ಮೂಲಕ ಉತ್ತಮ ಸೇವೆಯನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ.