ಹೊಸದಿಗಂತ ವರದಿ ಬೀದರ್:
2025ರ ಜನವರಿಯಲ್ಲಿ ನಡೆದ ಬೀದರ್ ಎಟಿಎಂ ದರೋಡೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಹೃದಯ ಭಾಗದಲ್ಲಿರುವ ಎಸ್ಬಿಐ ಬ್ಯಾಂಕ್ ಬಳಿ ಎಟಿಎಂ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿ ಸುಮಾರು 83 ಲಕ್ಷ ರೂ. ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು ಬಿಹಾರದಲ್ಲಿ ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ದರೋಡೆಕೋರರು ಬೈಕ್ನಲ್ಲಿ ಪರಾರಿಯಾಗುತ್ತಿರುವ ದೃಶ್ಯಗಳು ಹತ್ತಿರದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅಲ್ಲಿಂದ ಬೀದರ್ನಿಂದ ಹೈದರಾಬಾದ್ಗೆ ತೆರಳಿದ್ದ ಆರೋಪಿಗಳು, ಅಲ್ಲಿಂದ ಖಾಸಗಿ ಬಸ್ ಮೂಲಕ ರಾಯಪುರಕ್ಕೆ ತೆರಳಲು ಟಿಕೆಟ್ ರಿಸರ್ವ್ ಮಾಡಿದ್ದರು ಎನ್ನಲಾಗಿದೆ. ಬಸ್ನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಪೊಲೀಸರಿಗೆ ಸಿಕ್ಕಿ ಬೀಳುವ ಭೀತಿಯಿಂದ ಮತ್ತೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು.
ಇದನ್ನೂ ಓದಿ:
ಈ ವೇಳೆ ಆರೋಪಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಬೆಮ್ಮಳಖೇಡಾ ನಿವಾಸಿ ಗಿರಿ ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದರು. ಲಾಡಗೇರಿ ನಿವಾಸಿ ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಪ್ರಕರಣದ ತನಿಖೆ ಮುಂದುವರಿದಿದೆ, ಬಂಧಿತ ಆರೋಪಿಗಳಿಂದ ದರೋಡೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.



