ಹೊಸದಿಗಂತ ಡಿಜಿಟಲ್ ಡೆಸ್ಕ್:
ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವಿಗೀಡಾದ ದುರಂತ ಘಟನೆ ದಾವಣಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 54ರಲ್ಲಿ ನಡೆದಿದೆ.
ಜಾಲಿ ರೈಡ್ಗೆಂದು ಬಂದವರು ಮಸಣ ಸೇರಿದ ದುರಂತ ಇಂದು ಸಂಭವಿಸಿದೆ. ಕೇರಳ ಮೂಲದ ಅತುಲ್ (25) ಮತ್ತು ಋಷಿಕೇಶ್ (24) ಮೃತ ದುರ್ದೈವಿಗಳು.
ದಾವಣಗೆರೆಯ ಎಸ್ಎಸ್ ಆಸ್ಪತ್ರೆ ಪಕ್ಕದಲ್ಲಿರುವ ರೈಲ್ವೆ ಬ್ರಿಡ್ಜ್ ಬಳಿ ಈ ಅಪಘಾತ ಸಂಭವಿಸಿದೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಬ್ರಿಡ್ಜ್ ಮೇಲಿಂದ ಹಾರಿ ರೈಲ್ವೆ ಹಳಿ ಪಕ್ಕದಲ್ಲಿ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.
ಅಲ್ಲದೆ ರಸ್ತೆಯ ಮಧ್ಯೆಯೇ ಬಿದ್ದಿದ್ದ ಬೈಕ್ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಕೂಡಲೇ ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳ ಮೂಲದ ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.