ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರು ಗ್ರಾಮದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದ ಹಿನ್ನೆಲೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದ್ದು, ಒಂದೇ ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿದಿದೆ. ಗ್ರಾಮದಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ದಿಂಡಗೂರು ಗ್ರಾಮದ ಸುತ್ತಮುತ್ತ ಚಿರತೆಗಳು ರಾತ್ರಿ ವೇಳೆ ಗ್ರಾಮಕ್ಕೆ ನುಗ್ಗಿ ನಾಯಿಗಳು ಹಾಗೂ ಇತರ ಜಾನುವಾರುಗಳನ್ನು ಬಲಿ ಪಡೆಯುತ್ತಿದ್ದವು. ಹಗಲು ವೇಳೆಯಲ್ಲೂ ರೈತರ ಜಮೀನಿನಲ್ಲಿ ಕಾಣಿಸಿಕೊಂಡು ಮೇಯುತ್ತಿದ್ದ ಪಶುಗಳ ಮೇಲೆ ದಾಳಿ ನಡೆಸುತ್ತಿರುವ ಘಟನೆಗಳು ನಡೆದಿದ್ದವು. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಚಿರತೆಗಳನ್ನು ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.
ಇದನ್ನೂ ಓದಿ:
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಗಳನ್ನು ಸೆರೆಹಿಡಿಯಲು ಬೋನುಗಳನ್ನು ಅಳವಡಿಸಿದ್ದರು. ಇದರ ಫಲವಾಗಿ ಎರಡು ಚಿರತೆ ಬೋನಿಗೆ ಬಿದ್ದಿದೆ. ಒಂದೇ ವಾರದಲ್ಲಿ ಎರಡು ಚಿರತೆಗಳು ಸೆರೆ ಸಿಕ್ಕಿರುವುದರಿಂದ ಗ್ರಾಮಸ್ಥರು ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ.



